ADVERTISEMENT

ಬೀದರ್: ವಿದ್ಯಾರ್ಥಿಗಳಿಂದ ಶಿಕ್ಷಕರ ಪಾದಪೂಜೆ

ಜನಸೇವಾ ಶಾಲೆಯಲ್ಲಿ ಶಿಕ್ಷಕರ ದಿನ ಅರ್ಥಪೂರ್ಣ ಆಚರಣೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 14:03 IST
Last Updated 5 ಸೆಪ್ಟೆಂಬರ್ 2022, 14:03 IST
ಬೀದರ್‌ನ ಜನಸೇವಾ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ಪಾದಪೂಜೆ ಮಾಡಿದರು
ಬೀದರ್‌ನ ಜನಸೇವಾ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ಪಾದಪೂಜೆ ಮಾಡಿದರು   

ಬೀದರ್: ಇಲ್ಲಿಯ ಪ್ರತಾಪನಗರದ ಜನಸೇವಾ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರ ಪಾದಪೂಜೆ, ಸನ್ಮಾನ, ಸಿಹಿ ವಿತರಣೆ ಮೂಲಕ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿದ್ಯಾರ್ಥಿಗಳು ಪಾದಪೂಜೆ ಮಾಡಿ, ಶಾಲು ಹೊದಿಸಿ ಶಿಕ್ಷಕರನ್ನು ಗೌರವಿಸಿದರು. ಸಿಹಿ ತಿನ್ನಿಸಿ ಶಿಕ್ಷಕರ ದಿನದ ಶುಭಾಶಯ ಕೋರಿದರು.

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಣ ತಜ್ಞರಾಗಿದ್ದರು. ಭಾರತದ ತತ್ವಶಾಸ್ತ್ರ ವಿಶ್ವದ ಅನೇಕ ದೇಶಗಳಿಗೆ ಪರಿಚಯಿಸಿದ್ದರು. ನೇರ ನಡೆ ನುಡಿಗೆ ಹೆಸರಾಗಿದ್ದ ಅವರು, ಶಿಕ್ಷಕರಿಗೆ ಅಪಾರ ಗೌರವ ಕೊಡುತ್ತಿದ್ದರು. ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸಿಕೊಂಡರು ಎಂದು ವಿಶೇಷ ಉಪನ್ಯಾಸ ನೀಡಿದ ನೌಬಾದ್‍ನ ಸರ್ಕಾರಿ ಪ್ರಥಮ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಶಿವಕುಮಾರ ಉಪ್ಪೆ ಹೇಳಿದರು.

ADVERTISEMENT

ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಮಕ್ಕಳಿಗೆ ಉತ್ತಮ ಸಂಸ್ಕಾರ, ಭ್ರಾತೃತ್ವ, ಸೌಹಾರ್ದದ ವಾತಾವರಣ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಬಹು ದೊಡ್ಡದಾಗಿದೆ. ಶಿಕ್ಷಕರು ಮನಸ್ಸು ಮಾಡಿದರೆ ದೇಶದ ಚಿತ್ರಣವನ್ನೇ ಬದಲಿಸಬಹುದು ಎಂದು ನುಡಿದರು.

ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಮಾತನಾಡಿದರು. ಶಿಕ್ಷಕರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.

ಜನಸೇವಾ ಪ್ರತಿಷ್ಠಾನದ ಸದಸ್ಯ ಬಿ.ಎಸ್. ಕುದರೆ ಅಧ್ಯಕ್ಷತೆ ವಹಿಸಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ಸ್ವಾಮಿ, ಖಜಾಂಚಿ ಶಿವರಾಜ ಹುಡೇದ್, ಸದಸ್ಯ ಶಿವಲಿಂಗಪ್ಪ ಜಲಾದೆ, ಆಡಳಿತಾಧಿಕಾರಿ ಸೌಭಾಗ್ಯವತಿ, ಮುಖ್ಯಶಿಕ್ಷಕ ಶಿವಾನಂದ ಮಲ್ಲ ಇದ್ದರು.

ವಿದ್ಯಾರ್ಥಿಗಳಾದ ಅಮೂಲ್ಯ ಹಾಗೂ ಆರತಿ ನಿರೂಪಿಸಿದರು. ಕಾವ್ಯ ವಂದಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.