ಔರಾದ್: ಮಹಾರಾಷ್ಟ್ರದಿಂದ ಬಂದವರಲ್ಲಿ ಕೋವಿಡ್ ಸೋಂಕು ದೃಢಪಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಿದೆ.
ಕಮಲನಗರ ಬಳಿಯ ಚೆಕ್ಪೋಸ್ಟ್ನಲ್ಲಿ ತಪಾಸಣೆ ಚುರುಕುಗೊಳಿಸಲಾಗಿದೆ. ಅಧಿಕೃತ ಪಾಸ್ ಹೊಂದಿದ ವ್ಯಕ್ತಿ ಮತ್ತು ವಾಹನಗಳಿಗೆ ಜಿಲ್ಲೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಮಹಾರಾಷ್ಟ್ರದಿಂದ ಬರುವವರು ಕಮಲನಗರ ಚೆಕ್ಪೋಸ್ಟ್ ಮೂಲಕ ಬರಬೇಕು. ಅಲ್ಲಿಂದ ಬರುವ ವಾಹನ ಮತ್ತು ವ್ಯಕ್ತಿಯ ಸಮಗ್ರ ವಿವರ ಸಂಗ್ರಹಿಸಲಾಗುತ್ತಿದೆ. ಈ ರೀತಿಯ ಕಠಿಣ ನಿಯಮದಿಂದ ನಿನ್ನೆಯಿಂದ ವಾಹನಗಳ ಬರುವಿಕೆ ಸಂಖ್ಯೆ ಕಡಿಮೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಮುಂಬೈನಿಂದ ಬಂದ 14 ಜನರನ್ನು ಕಮಲನಗರದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಕೆಲವರು ಕಾಲ್ನಡಿಗೆಯಲ್ಲಿ ಬರುತ್ತಿದ್ದು, ಅಂತವರ ಮೇಲೆ ನಿಗಾ ಇಡುವಂತೆ ಆಯಾ ಗ್ರಾಮದ ಕಂದಾಯ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ.
ಔರಾದ್ ಮತ್ತು ಕಮಲನಗರ ತಾಲ್ಲೂಕು ಸೇರಿ ಸುಮಾರು 5000 ಜನ ವಲಸೆ ಕಾರ್ಮಿಕರು ಬಂದಿದ್ದಾರೆ. ಅವರೆಲ್ಲರಿಗೂ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇವರಲ್ಲಿ 2500 ಜನರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಶರಣಯ್ಯ ಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.