ADVERTISEMENT

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲೆಯ 400 ನೌಕರರು

​ಪ್ರಜಾವಾಣಿ ವಾರ್ತೆ
Published 23 ಮೇ 2022, 15:35 IST
Last Updated 23 ಮೇ 2022, 15:35 IST
ರಾಜೇಂದ್ರಕುಮಾರ ಗಂದಗೆ
ರಾಜೇಂದ್ರಕುಮಾರ ಗಂದಗೆ   

ಬೀದರ್: ಬೆಂಗಳೂರಿನಲ್ಲಿ ಮೇ 30, 31 ಹಾಗೂ ಜೂನ್ 1 ರಂದು ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಯ 400 ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.


ಕೇಂದ್ರ ಸಂಘದಲ್ಲಿ ಆನ್‍ಲೈನ್ ಮೂಲಕ ಹೆಸರು ನೋಂದಣಿ ಮಾಡಿಕೊಂಡಿರುವ ಜಿಲ್ಲಾಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಾಜ್ಯದ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.


ಕ್ರೀಡಾಕೂಟದಲ್ಲಿ ಕ್ರಿಕೆಟ್, ವಾಲಿಬಾಲ್, ಹಾಕಿ, ಫುಟ್‍ಬಾಲ್, ಕುಸ್ತಿ, ಈಜು, ಶಾಟ್‍ಪಟ್, ಭಲ್ಲೆ ಎಸೆತ ಸೇರಿದಂತೆ ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳು ನಡೆಯಲಿವೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನೌಕರರಿಗೆ ಮೂರು ದಿನ ಒಒಡಿ ಸೌಲಭ್ಯ ಇದೆ. ಬೆಂಗಳೂರಿನಲ್ಲಿ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT


ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 30 ರಂದು ಸಂಜೆ 4.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಅಂದು ಸಂಜೆ 6ಕ್ಕೆ ಖ್ಯಾತ ಗಾಯಕ ವಿಜಯ್ ಪ್ರಕಾಶ ಅವರಿಂದ ಸಂಗೀತ ರಸಸಂಜೆ ನಡೆಯಲಿದೆ. 31 ರಂದು ಸಂಜೆ 6ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿತ ಜಾನಪದ ಕಲಾ ತಂಡಗಳಿಂದ ಸಾಂಸ್ಕೃತಿಕ ಸಂಗೀತ ರಸಸಂಜೆ ಜರುಗಲಿದೆ. ಜೂನ್ 1 ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಹೇಳಿದ್ದಾರೆ.


ಕಳೆದ ರಾಜ್ಯಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲೆಯ ಅನೇಕ ನೌಕರರು ಸಾಧನೆ ಮೆರೆದಿದ್ದರು. ಈ ಬಾರಿಯೂ ಉತ್ತಮ ಸಾಧನೆ ತೋರುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.