ಬಸವಕಲ್ಯಾಣ: ‘ಕ್ಷೇತ್ರದ ಸಮಗ್ರ ವಿಕಾಸವೇ ನನ್ನ ಧ್ಯೇಯವಾಗಿದೆ. ಆದ್ದರಿಂದ ನೇಗಿಲ ಗುರುತಿಗೆ ಮತ ಚಲಾಯಿಸಿ ನನ್ನನ್ನು ಗೆಲ್ಲಿಸಿ’ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮನವಿ ಮಾಡಿದರು.
ನಗರದ ವಿವಿಧ ಬಡಾವಣೆಗಳಲ್ಲಿ ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಕೈಗೊಂಡು ಅವರು ಮಾತನಾಡಿದರು.
‘ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದೆ. ಆದರೆ, 30 ತಿಂಗಳಲ್ಲಿಯೇ ಆ ಪಕ್ಷದವರು ನನ್ನನ್ನು ಮರೆತು ಬಿಟ್ಟರು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲೆಂದು ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾದೆ. ಆದರೆ ಅವರು ಟಿಕೆಟ್ ನೀಡದೆ ಅನ್ಯಾಯ ಮಾಡಿದ್ದಾರೆ. ಆದ್ದರಿಂದ ಸ್ವಾಭಿಮಾನಿ ಬಳಗದ ಆಗ್ರಹದ ಮೇರೆಗೆ ಪಕ್ಷೇತರನಾಗಿ ಸ್ಪರ್ಧಿಸಿದ್ದೇನೆ’ ಎಂದರು.
‘ನಾನು ತಾಲ್ಲೂಕಿನಾದ್ಯಂತ ಪ್ರಚಾರ ನಡೆಸಿದ್ದೇನೆ. ಓಣಿ, ಮನೆಗಳಿಗೆ ಭೇಟಿ ನೀಡಿದ್ದೇನೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲ ಜಾತಿ, ಧರ್ಮಗಳ ಕಾರ್ಯಕರ್ತರು ನನ್ನೊಂದಿಗಿದ್ದು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ’ ಎಂದು ಹೇಳಿದರು.
ಶಿವಕುಮಾರ ಬಿರಾದಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.