ಔರಾದ್: ‘ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಭಾಗದ ಬಡ ಜನರಿಗೆ ಹೆಚ್ಚಿನ ಅನುಕೂಲವಾಗಿದೆ’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಚೆನ್ನಪ್ಪ ಉಪ್ಪೆ ಹೇಳಿದರು.
ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
‘ಗೃಹಲಕ್ಷ್ಮಿ ಹಣವನ್ನು ಅನೇಕ ಮಹಿಳೆಯರು ತಮ್ಮ ಮಕ್ಕಳ ಶಿಕ್ಷಣ, ಸ್ವ-ಉದ್ಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಅನೇಕರಿಗೆ ಈ ಹಣ ನೆರವಿಗೆ ಬಂದಿದೆ. ಶಕ್ತಿ ಯೋಜನೆ ಗ್ರಾಮೀಣ ಮಹಿಳೆಯರು ಊರು ಬಿಟ್ಟು ಹೊರ ಬಂದು ಕೆಲಸ ಮಾಡಲು ಸಹಾಯಕವಾಗಿದೆ’ ಎಂದು ತಿಳಿಸಿದರು.
‘ಕಾಂಗ್ರೆಸ್ ಸರ್ಕಾರ ಇರುವ ತನಕ ಈ ಎಲ್ಲ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ. ಅಧಿಕಾರಿಗಳು ಈ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಸಹಕರಿಸಬೇಕು. ಒಬ್ಬರೂ ಕೂಡ ಯೋಜನೆಯ ಲಾಭದಿಂದ ವಂಚಿತರಾಗಬಾರದು’ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಉಪಾಧ್ಯಕ್ಷ ಬಾಳಾಸಾಹೇಬ್ ಪಾಟೀಲ, ಸದಸ್ಯರಾದ ಶಿವಕುಮಾರ ಪಾಟೀಲ, ಚಂದು ಡಿಕೆ, ಅರುಣ ರಾಠೋಡ್, ಶಂಕರ ಪಾಟೀಲ, ರಾಜಕುಮಾರ ಕಂದಗೂಳ ಹಾಗೂ ಜೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ ಮತ್ತು ನಾಗರಿಕ ಸರಬರಾಜು, ಸಾರಿಗೆ ಇಲಾಖೆ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.