ADVERTISEMENT

ಬೀದರ್‌: ಸಮಾಜದ ಪರಿಶುದ್ಧತೆಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದು

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅಭಿಮತ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 12:44 IST
Last Updated 21 ಆಗಸ್ಟ್ 2020, 12:44 IST
ಬೀದರ್‌ನ ಎಸ್.ಆರ್.ಎಸ್. ಫಂಕ್ಷನ್ ಹಾಲ್‍ನಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಮಾತನಾಡಿದರು
ಬೀದರ್‌ನ ಎಸ್.ಆರ್.ಎಸ್. ಫಂಕ್ಷನ್ ಹಾಲ್‍ನಲ್ಲಿ ಶುಕ್ರವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಮಾತನಾಡಿದರು   

ಬೀದರ್‌: ‘ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಮಾಧ್ಯಮ ರಂಗ ಅಗತ್ಯ. ಸಮಾಜದ ಪರಿಶುದ್ಧತೆಯಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅಭಿಪ್ರಾಯಪಟ್ಟರು.

ಇಲ್ಲಿಯ ಎಸ್.ಆರ್.ಎಸ್. ಫಂಕ್ಷನ್ ಹಾಲ್‍ನಲ್ಲಿ ಶುಕ್ರವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರ ಹಾಗೂ ಸಮಾಜದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಜನರ ಧ್ವನಿಯನ್ನು ಆಡಳಿತ ವರ್ಗಕ್ಕೆ ಹಾಗೂ ಜನಪ್ರತಿನಿಧಿಗಳ ಕಿವಿಗೆ ತಲುಪಿಸುವ ಸಂದೇಶ ವಾಹಕ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.

ADVERTISEMENT

‘ಕೋವಿಡ್-19 ಈ ಸಂದಿಗ್ದ ಸ್ಥಿತಿಯಲ್ಲಿ ವೈದ್ಯರು, ಪೊಲೀಸರ ಜತೆಗೆ ಪತ್ರಕರ್ತರು ಕೋವಿಡ್ ವಾರಿರ್ಯಸ್‍ಗಳಾಗಿ ತಮ್ಮ ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದರು.

ಸಾನ್ನಿಧ್ಯ ವಹಿಸಿದ್ದ ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ರಾಜಯೋಗ ಕೇಂದ್ರ ಪಾವನಧಾಮದ ಸಂಚಾಲಕಿ ಬಿ.ಕೆ ಪ್ರತಿಮಾ ಬಹೆನಜಿ ಮಾತನಾಡಿ, ‘ಸಕಾರತ್ಮಕ ವಿಚಾರಗಳಿಗೆ ಪ್ರಾಮುಖ್ಯ ನೀಡುತ್ತಿರುವ ಪತ್ರಿಕೆಗಳಿಂದ ಶಸಕ್ತ ಭಾರತ ನಿರ್ಮಾಣ ಸಾಧ್ಯವಿದೆ’ ಎಂದು ಹೇಳಿದರು.

ಮುಖ್ಯ ಅತಿಥಿ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಮಾತನಾಡಿ, ‘ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಶುದ್ಧೀಕರಣಕ್ಕೆ ಪತ್ರಕರ್ತರ ಸೇವೆ ಅಗತ್ಯವಾಗಿದೆ. ದೇಶದ ಸ್ವಾತಂತ್ರ್ಯ ಪಡೆಯಲ್ಲಿ ಪತ್ರಿಕೆಗಳು ವಹಿಸಿದ ಕಾರ್ಯವನ್ನು ಎಂದಿಗೂ ಮೆರೆಯಲಾಗದು’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕಕುಮಾರ ಕರಂಜಿ ಮಾತನಾಡಿ, ‘ಪತ್ರಕರ್ತರಿಗೆ ಆಯುಷ್ಮಾನ ಭಾರತ ಅಡಿಯಲ್ಲಿ ₹ 5 ಲಕ್ಷ ವರೆಗೆ ವಿಮಾ ಸೌಲಭ್ಯ, ಉಚಿತ ಬಸ್ ಪಾಸ್, ನಿವೃತ್ತಿ ವೇತನ ಸೇರಿದಂತೆ ಇತರೆ ಸೌಕರ್ಯಗಳು ಮಾಧ್ಯಮ ಪಟ್ಟಿಯಲ್ಲಿರುವ ಹಾಗೂ ಮಾಧ್ಯಮ ಪಟ್ಟಿಯಲ್ಲಿ ಇರದ ಪತ್ರಕರ್ತರಿಗೂ ಸಿಗಲಿದೆ’ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಅತ್ಯುತ್ತಮ ಸೇವೆಗೈದ ಪತ್ರಕರತರನ್ನು ಸನ್ಮಾನಿಸಲಾಯಿತು. ಜಿಲ್ಲೆಯ ಹಿರಿಯ ಪತ್ರಕರ್ತ ಗಂಧರ್ವ ಸೇನಾ ಮಾತನಾಡಿದರು.ಸಂಘದ ರಾಜ್ಯ ಪ್ರತಿನಿಧಿ ಬಸವರಾಜ ಕಾಮಶೆಟ್ಟಿ ಹಾಗೂ ಪತ್ರಕರ್ತ ಡಿ.ಕೆ ಗಣಪತಿ ಇದ್ದರು.

ನಾಗಶೆಟ್ಟಿ ಧರಂಪುರ ಸ್ವಾಗತಿಸಿದರು. ಶಿವಕುಮಾರ ಸ್ವಾಮಿ ನಿರೂಪಿಸಿದರು. ಗವಿಸಿದ್ದಪ್ಪ ಹೊಸಮನಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.