ಬೀದರ್: ‘ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಪಿ.ಸಿದ್ರಾಮ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಜಾಗೃತಿ ವೇದಿಕೆ, ನ್ಯೂ ಮದರ್ ತೆರೆಸಾ ಗ್ರಾಮೀಣ ಹಾಗೂ ನಗರಾಭಿವೃದ್ಧಿ ಸಂಸ್ಥೆ, ಜಗದ್ಗುರು ಪಂಚಾಚಾರ್ಯ ಯುವಕ ಸಂಘ ಹಾಗೂ ನವೀನ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಲಾಡಗೇರಿಯ ಹಿರೇಮಠದಲ್ಲಿ ರಾಷ್ಟ್ರೀಯ ಯುವ ಸಪ್ತಾಹ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಹಾಗೂ ಭಾರತವನ್ನು ವಿಶ್ವಗುರುವಾಗಿಸಲು ಯುವ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ದೇಶಭಕ್ತ ಸ್ವಾಮಿ ವಿವೇಕಾನಂದರ ಹೆಸರು ಕೇಳಿದರೆ ಮೈ ಪುಳಕಗೊಳ್ಳುತ್ತದೆ. ಭಾರತದ ಹೆಮ್ಮೆಯ ಪುತ್ರ ಯುವಜನರಿಗೆ ಸ್ಫೂರ್ತಿಯ ಚಿಲುಮೆಯಂತಿದ್ದು, ವಿವೇಕಾನಂದರ ಚಿಂತನೆ ಸಂದೇಶಗಳು ಜೀವನದ ಆದರ್ಶಗಳನ್ನು ಇಂದಿನ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.
‘ಭಾರತದ ಸಂವಿಧಾನವು ವಿಶ್ವದಲ್ಲಿಯೇ ಶ್ರೇಷ್ಠವಾದದ್ದು. ನಮ್ಮ ಸಂವಿಧಾನ ಎಲ್ಲ ಕಾನೂನುಗಳ ತಾಯಿ. ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಸಹೋದರತೆ ಪ್ರತಿಯೊಬ್ಬರ ಘನತೆ ಎತ್ತಿ ಹಿಡಿಯುವ ನಮ್ಮ ಸಂವಿಧಾನದ ಬಗ್ಗೆ ಪ್ರತಿಯೊಬ್ಬರು ಅರಿತುಕೊಳ್ಳಬೇಕು’ ತಿಳಿಸಿದರು.
ಲಾಡಗೇರಿ ಹಿರೇಮಠದ ಪೀಠಾಧ್ಯಕ್ಷ ಗಂಗಾಧರ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರಾಜಕುಮಾರ ಹೆಬ್ಬಾಳೆ, ನವೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ ಮಾತನಾಡಿದರು.
ರಾಜ್ಯ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯಾ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಒಂದು ಲಕ್ಷ ರೋಗಿಗಳ ಕೋವಿಡ್ ಪರೀಕ್ಷೆ ಮಾಡಿದ ಡಾ.ಚಂದ್ರಕಾಂತ ಚಿಲ್ಲರ್ಗೆ ಹಾಗೂ ಡಾ.ಶಿವಾನಂದ ಚಿಕ್ಕಮಠ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಸಂಯೋಜಕ ಸಂಜೀವಕುಮಾರ ಸ್ವಾಮಿ, ನೆಹರೂ ಯುವ ಕೇಂದ್ರದ ಜಿಲಾ ಯುವ ಸಮನ್ವಯಾಧಿಕಾರಿ ಮಯೂರಕುಮಾರ ಗೋರ್ಮೆ, ಅರವಿಂದ ಕುಲಕರ್ಣಿ, ಸುನೀಲ ಭಾವಿಕಟ್ಟಿ ಇದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.