ADVERTISEMENT

ಸೂಲಿಬೆಲೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳುತ್ತಿಲ್ಲ: ಗುರುಬಸವ ಪಟ್ಟದ್ದೇವರು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 23:30 IST
Last Updated 27 ಫೆಬ್ರುವರಿ 2024, 23:30 IST
ಗುರುಬಸವ ಪಟ್ಟದ್ದೇವರು
ಗುರುಬಸವ ಪಟ್ಟದ್ದೇವರು   

ಭಾಲ್ಕಿ: ‘ಇಲ್ಲಿಯ ಚನ್ನಬಸವಾಶ್ರಮದಲ್ಲಿ ಬುಧವಾರ ಸಂಜೆ 6 ಗಂಟೆಗೆ ನಡೆಯಲಿರುವ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳುತ್ತಿಲ್ಲ’ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

‘ಈ ಕಾರ್ಯಕ್ರಮ ಸಂಬಂಧ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ. ಅನುಮತಿ ಪಡೆಯದೇ ನನ್ನ, ನಮ್ಮ ಗುರುಗಳ ಫೋಟೋ ಬಳಸಿಕೊಂಡ ಪೋಸ್ಟರ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿರುವುದು ಜನರಲ್ಲಿ ತಪ್ಪು ಕಲ್ಪನೆ ಮೂಡಿಸಿದೆ. ಇದರಿಂದ ಮನಸ್ಸಿಗೆ ಆಘಾತವಾಗಿದೆ. ನಂತರ ಆಯೋಜಕರು ಬಂದು ಕಾರ್ಯಕ್ರಮಕ್ಕೆ ಬರಬೇಕು ಎಂದು ಕೇಳಿಕೊಂಡಿದ್ದಾರೆ. ಅನುಮತಿ ಪಡೆಯದೆ ಪೋಸ್ಟರ್‌ನಲ್ಲಿ ನಮ್ಮ ಫೋಟೋಗಳನ್ನು ಬಳಸಿರುವುದು ತಪ್ಪಲ್ಲವೇ ಎಂದು ಆಯೋಜಕರನ್ನು ಪ್ರಶ್ನಿಸಿದ್ದೆ. ತಮ್ಮಿಂದ ತಪ್ಪಾಗಿದ್ದು, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಆಯೋಜಕರು ಕ್ಷಮೆಯಾಚಿಸಿದ್ದಾರೆ’ ಎಂದು ಗುರುಬಸವ ಪಟ್ಟದ್ದೇವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

‘ಪೂರ್ವ ನಿಗದಿಯಂತೆ ನಾವು ಬೆಂಗಳೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿರುವುದರಿಂದ ಅಲ್ಲಿಗೆ ತೆರಳುತ್ತಿದ್ದೇವೆ ಎಂದು ಆಯೋಜಕರಿಗೆ ತಿಳಿಸಿದ್ದೇವೆ’ ಎಂದು ಮಾಹಿತಿ ನೀಡಿದರು.

ADVERTISEMENT

ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಲ್ಕಿಯ ಹಿರಿಯ, ಕಿರಿಯ ಸ್ವಾಮೀಜಿಗಳಿಬ್ಬರೂ ಸಾನ್ನಿಧ್ಯ ವಹಿಸುತ್ತಿದ್ದಾರೆ ಎಂಬ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದುದರಿಂದ ಬಸವಾಭಿಮಾನಿಗಳಲ್ಲಿ ಗೊಂದಲ, ಬೇಸರ ಮೂಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪರ–ವಿರೋಧ ಚರ್ಚೆಗಳಾಗುತ್ತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.