ಬೀದರ್: ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡವರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಕಾರಂಜಾ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿಯಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳದಲ್ಲಿ ಗುರುವಾರ ಮೂವರು ರೈತರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು.
‘ಪರಿಹಾರ ಕೊಡಿ, ಇಲ್ಲವೇ ಸಾಮೂಹಿಕ ಆತ್ಮಹತ್ಯೆಗೆ ಅವಕಾಶ ಕೊಡಿ’ ಎಂದು ಘೋಷಣೆ ಕೂಗುತ್ತ ಬುಧವಾರ ಪ್ರತಿಭಟನೆ ನಡೆಸಿದ್ದರು. ಆತ್ಮಹತ್ಯೆಗೆ ಯತ್ನಿಸಿದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ವಾಹನದಲ್ಲಿ ಬೀದರ್ ತಾಲ್ಲೂಕಿನ ರೇಕುಳಗಿಯ ರೈತ ನಾಗಶೆಟ್ಟಿ ವಿಷ ಸೇವನೆಗೆ ಯತ್ನಿಸಿ, ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಇದಾದ ಮರುದಿನ ಮೂವರು ರೈತರು ಧರಣಿ ಸ್ಥಳದಲ್ಲಿ ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಪೊಲೀಸರು, ಅಸ್ವಸ್ಥರಾದ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ, ರೈತರಾದ ರಾಜಪ್ಪ ಕೋಸಂ ಹಾಗೂ ರಾಜಶೇಖರ ಅಲಗೋಲ ಅವರನ್ನು ತಕ್ಷಣವೇ ಬ್ರಿಮ್ಸ್ಗೆ ದಾಖಲಿಸಿದ್ದಾರೆ.
‘ಮೂವರು ರೈತರು ಅಸ್ವಸ್ಥರಾಗಿದ್ದು, ಅವರಿಗೆ ಬ್ರಿಮ್ಸ್ನ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
‘ನಮ್ಮ ಅಹೋರಾತ್ರಿ ಧರಣಿ 888ನೇ ದಿನಕ್ಕೆ ಕಾಲಿರಿಸಿದೆ. ಆದರೆ, ಸ್ಪಂದಿಸುತ್ತಿಲ್ಲ. ಇದರಿಂದ ಬೇಸತ್ತು ಮೂವರು ರೈತರು ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ’ ಎಂದು ರೈತ ಮುಖಂಡ ಕೇದಾರನಾಥ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.