
ಭಾಲ್ಕಿ: ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮದಡಿಯಲ್ಲಿ ಜ.30ರಿಂದ ಫೆ.13ರವರೆಗೆ ಜಾಥಾಗಳ ಮೂಲಕ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಜನ ಜಾಗೃತಿ ನಡೆಯಲಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ರವಿ ಜಿ.ಕಲ್ಲಶೆಟ್ಟಿ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಜನಜಾಗೃತಿ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕುರಿತು ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಡಂಗೂರ ಸಾರಿ ಜನರಿಗೆ ಜಾಗೃತಿ ಮೂಡಿಸಬೇಕು. ಜ.30ರಂದು ಗ್ರಾಮ ಪಂಚಾಯಿತಿಯಲ್ಲಿ ಪ್ರತಿಜ್ಞಾ ವಿಧಿ ಕೈಗೊಂಡು ಕುಷ್ಠರೋಗಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ ಇಜಾರೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಗೋಪಾಲ ಹಿಪ್ಪರಗಿ ಮಾತನಾಡಿ, ಎಲ್ಲಾ ಇಲಾಖೆಯವರು ಆರೋಗ್ಯ ಇಲಾಖೆಗೆ ಅಗತ್ಯ ಸಹಾಯ, ಸಹಕಾರ ಒದಗಿಸಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮ ಯಶಸ್ವಿ ಮಾಡಬೇಕು ಎಂದು ಹೇಳಿದರು. ಪ್ರಮುಖರಾದ ರೋಹಿದಾಸ ಜಿ. ರಾಠೋಡ್, ಆಕಾಶ, ಗುಂಡಪ್ಪಾ, ಸಂತೋಷ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.