ಬೀದರ್: ಜಿಲ್ಲೆಯಲ್ಲಿ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಿಯೋಜನೆಗೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ನಗರದ ಜಿಲ್ಲಾ ರಂಗಮಂದಿರದಲ್ಲಿ ಶನಿವಾರ ತರಬೇತಿ ನೀಡಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಮಾತನಾಡಿ, ‘ಮತದಾನದ ದಿನ ಚುನಾವಣಾ ಅಧಿಕಾರಿಗಳು ತಮಗೆ ನೀಡಿದ ಅರ್ಜಿ ನಮೂನೆಗಳನ್ನು ಅಚ್ಚುಕಟ್ಟಾಗಿ ಭರ್ತಿ ಮಾಡಬೇಕು. ತರಬೇತಿಯಲ್ಲಿ ನೀಡಲಾದ ಸೂಚನೆಗಳನ್ನು ಪಾಲಿಸಬೇಕು’ ಎಂದು ನಿರ್ದೇಶನ ನೀಡಿದರು.
‘ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪ್ರತಿಯೊಂದು ಮತಗಟ್ಟೆಯಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದು ಸ್ಥಳೀಯ ಚುನಾವಣೆ ಆಗಿರುವ ಕಾರಣ ಸಿಬ್ಬಂದಿ ಸೂಕ್ಷ್ಮವಾಗಿ ಕರ್ತವ್ಯ ನಿರ್ವಹಿಸಬೇಕು. ಡಿಮಸ್ಟರಿಂಗ್ ವೇಳೆ ಯಾವುದೇ ರೀತಿಯ ಲೋಪಗಳಿಗೆ ಆಸ್ಪದ ಆಗದಂತೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.
ಚುನಾವಣಾ ಮಾಸ್ಟರ್ ಟ್ರೇನರ್ ಡಾ.ಗೌತಮ ಅರಳಿ ಮಾತನಾಡಿ, ‘ಮತದಾನವು ಮೇ 29ರ ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದೆ. ಚುನಾವಣಾ ಸಿಬ್ಬಂದಿ ಮುಂಚಿತವಾಗಿ ಮತಗಟ್ಟೆ ಕೇಂದ್ರದಲ್ಲಿ ಹಾಜರಿರಬೇಕು. ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳು, ಎಲೆಕ್ಟ್ರಾನಿಕ್ ಮತಯಂತ್ರಗಳ ಕುರಿತು ವಿವರಣೆ ನೀಡಿದರು. ಬಳಿಕ ಎಲೆಕ್ಟ್ರಾನಿಕ್ ಮತಯಂತ್ರಗಳ ಪ್ರಾತ್ಯಕ್ಷಿಕೆ ನಡೆಸಲಾಯಿತು.
ತರಬೇತಿಯಲ್ಲಿ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು(ಪಿಆರ್ಒ), ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು(ಎಪಿಆರ್ಒ) ಹಾಗೂ ಮತಗಟ್ಟೆ ಅಧಿಕಾರಿಗಳು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.