ಬೀದರ್: ಜಿಲ್ಲೆಯಲ್ಲಿ ಎರಡು ಲಕ್ಷ ಕಾಂಗ್ರೆಸ್ ಸದಸ್ಯತ್ವ ಗುರಿ ಹೊಂದಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾಹಿತಿ ನೀಡಿದರು.
ಸದಸ್ಯತ್ವ ಅಭಿಯಾನ ಕುರಿತು ನಗರದ ಶಿವನಗರದಲ್ಲಿ ಇರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಭಿಯಾನ ಮಾರ್ಚ್ 31 ರ ವರೆಗೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲೆಯ ಬೀದರ್, ಭಾಲ್ಕಿ, ಹುಮನಾಬಾದ್, ಬಸವಕಲ್ಯಾಣ, ಔರಾದ್ ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿಯಾನ ಉತ್ಸಾಹದಿಂದ ನಡೆದಿದೆ ಎಂದು ಹೇಳಿದರು.
ಪಕ್ಷದ ಬಲವರ್ಧನೆಗಾಗಿ ಕಾರ್ಯಕರ್ತರು ಹೆಚ್ಚು ಹೆಚ್ಚು ಡಿಜಿಟಲ್ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ತಿಳಿಸಿದರು.
ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಪಕ್ಷದ ಕಾರ್ಯಕರ್ತರ ಗೆಲುವು ಆಗಿದೆ. ಇದರಿಂದ ಜಿಲ್ಲೆಯಲ್ಲಿ ಪಕ್ಷದ ಶಕ್ತಿ ವೃದ್ಧಿಯಾಗಿದೆ ಎಂದು ಹೇಳಿದರು.
ಸದಸ್ಯತ್ವ ಅಭಿಯಾನದ ಉಸ್ತುವಾರಿ ಶರಣಕುಮಾರ ಮೋದಿ ಮಾತನಾಡಿ, ಶಾಸಕರು, ವಿಧಾನ ಪರಿಷತ್ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಬ್ಲಾಕ್ ಸದಸ್ಯತ್ವ ಅಭಿಯಾನದ ಉಸ್ತುವಾರಿಗಳಾದ ಕನಿರಾಮ ರಾಠೋಡ್, ಮಾಣಿಕ ರೆಡ್ಡಿ, ಗೋಪಿಕೃಷ್ಣ, ಶಾಮ ನಾಟಿಕರ್, ಬ್ಲಾಕ್ ಕಾಂಗ್ರೆಸ್ ಹಾಗೂ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.