ADVERTISEMENT

ರಾಜ್ಯದಲ್ಲಿ ಮೂರು ಸೋಲಾರ್‌ ಪಾರ್ಕ್‌ ನಿರ್ಮಾಣ: ಕೇಂದ್ರ ಸಚಿವ ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 7:00 IST
Last Updated 17 ಆಗಸ್ಟ್ 2021, 7:00 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್‌: ‘ಖಾಸಗಿ ಸಹಭಾಗಿತ್ವದಲ್ಲಿ ₹ 4,800 ಕೋಟಿ ಯೋಜನಾ ವೆಚ್ಚದಲ್ಲಿ ರಾಜ್ಯದ ಕೊಪ್ಪಳ, ಬಾಗಲಕೋಟೆ ಹಾಗೂ ಬೀದರ್ ಜಿಲ್ಲೆಯ ಔರಾದ್‌ನಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು’ ಎಂದು ಕೇಂದ್ರದ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

‘ಒಂದು ಮೆಗಾವ್ಯಾಟ್‌ ಯುನಿಟ್‌ ಉತ್ಪಾದನೆಗೆ ಆರಂಭಿಕ ಸರಾಸರಿ ₹ 3.75 ಕೋಟಿಯಿಂದ ₹ 4 ಕೋಟಿ ವೆಚ್ಚವಾಗಲಿದೆ. ಪ್ರತಿಯೊಂದು ಪಾರ್ಕ್‌ನಲ್ಲಿ 1,200 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಲಾಗುವುದು’ ಎಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಕೊಪ್ಪಳದಲ್ಲಿ 15 ಸಾವಿರ ಎಕರೆ, ಬಾಗಲಕೋಟೆಯಲ್ಲಿ 9,600 ಎಕರೆ ಜಾಗ ಗುರುತಿಸಲಾಗಿದೆ. ಔರಾದ್‌ನಲ್ಲಿ ರೈತರ ಜಮೀನುಗಳನ್ನು 25 ವರ್ಷಗಳ ಅವಧಿಗೆ ಲೀಜ್‌ ಪಡೆದು ಅವರಿಗೆ ಪ್ರತಿ ಎಕರೆಗೆ ₹ 25 ಸಾವಿರ ಕೊಡಲಾಗುವುದು. ಪಾರ್ಕ್‌ ನಿರ್ಮಾಣಕ್ಕೆ ಈಗಾಗಲೇ ಟೆಂಡರ್‌ ಕರೆಯಲಾಗಿದೆ‘ ಎಂದು ಎಂದು ಹೇಳಿದರು.

ADVERTISEMENT

‘ರಾಷ್ಟ್ರೀಯ ಸೋಲಾರ್ ನೀತಿಯನ್ನು ಪರಿಷ್ಕರಿಸಲಾಗುವುದು. ಸೋಲಾರ್‌ ಪಾರ್ಕ್‌ನಲ್ಲಿ ಉತ್ಪಾದನೆಯಾದ ವಿದ್ಯುತ್‌ ಅನ್ನು ವಿದ್ಯುತ್‌ ಕಂಪನಿಗಳು ಕಡ್ಡಾಯವಾಗಿ ಖರೀದಿಸುವಂತೆ ಆದೇಶ ಹೊರಡಿಸಲಾಗುವುದು. ಗ್ರಾಹಕರಿಗೆ ನಿರಂತರ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವುದೇ ಇದರ ಉದ್ದೇಶವಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.