ADVERTISEMENT

ಅನ್ಯ ಯೋಜನೆಗೆ ಅನುದಾನ ಬಳಕೆ: ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 16:09 IST
Last Updated 30 ಆಗಸ್ಟ್ 2024, 16:09 IST
ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ಬಹುಜನ ಸಮಾಜ ಪಕ್ಷದ ಬೀದರ್ ದಕ್ಷಿಣ ಘಟಕದ ಪದಾಧಿಕಾರಿಗಳು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ನಾಡ ಉಪ ತಹಶೀಲ್ದಾರ್ ಕಚೇರಿ ಅಧಿಕಾರಿಗೆ ಸಲ್ಲಿಸಿದರು
ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ಬಹುಜನ ಸಮಾಜ ಪಕ್ಷದ ಬೀದರ್ ದಕ್ಷಿಣ ಘಟಕದ ಪದಾಧಿಕಾರಿಗಳು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ನಾಡ ಉಪ ತಹಶೀಲ್ದಾರ್ ಕಚೇರಿ ಅಧಿಕಾರಿಗೆ ಸಲ್ಲಿಸಿದರು   

ಬಗದಲ್ (ಜನವಾಡ): ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬೀದರ್ ದಕ್ಷಿಣ ಘಟಕ ಒತ್ತಾಯಿಸಿದೆ.

ಘಟಕದ ಪದಾಧಿಕಾರಿಗಳು ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ಶುಕ್ರವಾರ ಈ ಕುರಿತು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ನಾಡ ಉಪ ತಹಶೀಲ್ದಾರ್ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಆಡಳಿತದ ಅವಧಿಯಲ್ಲಿ ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆಗಳ ಆಶಯಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದರು.

ADVERTISEMENT

2014-15ರಿಂದ ಈವರೆಗೆ ಕಾಯ್ದೆಯಡಿ ಮೀಸಲಿರಿಸಲಾದ ಅನುದಾನದಲ್ಲಿ ಶೇ 10ರಷ್ಟನ್ನು ಸಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ವಿನಿಯೋಗಿಸಿಲ್ಲ ಎಂದು ದೂರಿದರು.

ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನ ಉದ್ದೇಶಿತ ಯೋಜನೆಗಳಿಗೆ ಮಾತ್ರ ಬಳಸಬೇಕು. ಬೇರೆ ಉದ್ದೇಶಕ್ಕೆ ಬಳಸಲಾದ ಅನುದಾನವನ್ನು ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಖಾತೆಗೆ ಮರಳಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ಪಕ್ಷದ ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಉಮೇಶ ಗುತ್ತೇದಾರ, ಉಪಾಧ್ಯಕ್ಷರಾದ ರಜನಿಕಾಂತ, ಮಹಮ್ಮದ್ ಏಜಾಜ್, ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಮನ್ನಳ್ಳಿ, ಕಾರ್ಯದರ್ಶಿಗಳಾದ ಶ್ರೀಮಂತ ಬಗದಲ್, ಗುಂಡಪ್ಪ ದಾರ್ಕೆ ಹಾಗೂ ಖಜಾಂಚಿ ಜೀವನ ಗಡಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.