
ಬೀದರ್: ‘ಗಡಿನಾಡು ಬೀದರ್ ಜಿಲ್ಲೆಯ ಸಾಂಸ್ಕೃತಿಕ ಚಹರೆಯನ್ನು ಬದಲಿಸಿ, ಕನ್ನಡದ ಅಸ್ಮಿತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ವೀರಲೋಕ ಪುಸ್ತಕ ಸಂತೆ ಅತ್ಯಂತ ಶ್ಲಾಘನೀಯವಾಗಿದೆ’ ಎಂದು ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿದ, ಕನ್ನಡಕ್ಕಾಗಿ ಭಾಲ್ಕಿ ಹಿರೇಮಠ ಸಂಸ್ಥಾನದ ಕೊಡುಗೆ ಅಪಾರವಾದುದು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ಭಾಗದಲ್ಲಿ ಕನ್ನಡ ಕಟ್ಟುವ ಕೆಲಸವನ್ನು ಅವಿರತವಾಗಿ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ. ಪುಸ್ತಕ ಸಂತೆ ರಚನಾತ್ಮಕ ಕಾರ್ಯಕ್ರಮವಾಗಿದ್ದು, ಇಂತಹ ಪ್ರಯತ್ನಗಳು ನಿರಂತರವಾಗಿ ರಾಜ್ಯದೆಲ್ಲೆಡೆ ನಡೆಯಬೇಕಿದೆ ಎಂದರು.
ಜ. 24ರಿಂದ 26ರ ವರೆಗೆ ಬೀದರ್ನ ಸಾಯಿ ಶಾಲೆ ಮೈದಾನದಲ್ಲಿ ಪುಸ್ತಕ ಸಂತೆ ನಡೆಯಲಿದ್ದು, ಐವತ್ತಕ್ಕೂ ಹೆಚ್ಚು ಮಳಿಗೆಗಳು, ನೂರು ಜನ ಪ್ರಕಾಶಕರು, ಒಂದೇ ಸೂರಿನಲ್ಲಿ ರಾಜ್ಯದ ಹಲವು ಲೇಖಕರು ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದರು.
ಪ್ರಾಚಾರ್ಯ ಬಸವರಾಜ ಬಲ್ಲೂರ, ಎಚ್.ಕೆ.ಇ ಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ. ರಜನೀಶ್ ವಾಲಿ, ರೇವಣಸಿದ್ದಪ್ಪ ಜಲಾದೆ, ಶಿವಶಂಕರ ಟೋಕರೆ, ಗುರುನಾಥ ಅಕ್ಕಣ್ಣಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.