
ಆರೋಗ್ಯ ಕ್ಷೀಣಿಸಿದ್ದರಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಂದೆ ಭೀಮಣ್ಣಾ ಖಂಡ್ರೆಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಬಿ. ಖಂಡ್ರೆ
ಬೀದರ್: ಮಾಜಿಸಚಿವರೂ ಆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಭೀಮಣ್ಣಾ ಖಂಡ್ರೆ (102) ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ನಗರದ ಗುದಗೆ ಮಲ್ಟಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಭೀಮಣ್ಣಾ ಖಂಡ್ರೆ ಅವರಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದಿದೆ. ವೈದ್ಯಕೀಯ ತಂಡ ಉಪಾಚಾರ ಮಾಡುತ್ತಿದ್ದು, ಆರೋಗ್ಯ ಸುಧಾರಣೆ ಕಾಣುತ್ತಿದೆ’ ಎಂದು ಹಿರಿಯ ವೈದ್ಯ ಡಾ. ಚಂದ್ರಕಾಂತ ಗುದಗೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ವಿಷಯ ತಿಳಿದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಅವರು ಆಸ್ಪತ್ರೆಗೆ ಭೇಟಿ ಕೊಟ್ಟು, ತಂದೆಯ ಯೋಗಕ್ಷೇಮ ವಿಚಾರಿಸಿದರು. ವೈದ್ಯರಿಂದ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಈಶ್ವರ ಬಿ. ಖಂಡ್ರೆ, ಒಂದು ವಾರದಿಂದ ತಂದೆಯವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವೈದ್ಯರ ತಂಡ 24 ತಾಸು ನಿಗಾ ವಹಿಸಿದೆ. ಇಂದು ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆರೋಗ್ಯ ಸ್ಥಿರವಾಗಿದೆ. ವಯೋ ಸಹಜ ಕಾಯಿಲೆ ಇದೆ. ಉಸಿರಾಟದಲ್ಲಿ ಸ್ವಲ್ಪ ತೊಂದರೆಯಾಗಿತ್ತು. ಎರಡ್ಮೂರು ದಿನಗಳಿಂದ ಬಿಪಿಯಲ್ಲಿ ಏರುಪೇರಾಗಿದೆ. ವೈದ್ಯರು ಚಿಕಿತ್ಸೆ ಕೊಡುತ್ತಿದ್ದಾರೆ. ಇಂದು ಬೆಳಿಗ್ಗೆಯಿಂದ ಆರೋಗ್ಯ ಸುಧಾರಣೆ ಕಂಡಿದೆ. ಅವರು ಸುಧಾರಣೆ ಕಾಣುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.