ಭಾಲ್ಕಿ: ‘ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಸಣ್ಣ–ಪುಟ್ಟ ಸಮಸ್ಯೆಗಳನ್ನು ಧೈರ್ಯದಿಂದ ಬಗೆಹರಿಸಿಕೊಳ್ಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಶುಕ್ರವಾರ ನಡೆದ ಕಲ್ಯಾಣಮ್ಮ ಮನೋವಿಕಲಾಂಗ ಕಿರಿಯ, ಹಿರಿಯ ಬಾಲಕಿಯರ ಬಾಲ ಮಂದಿರದ ಅಡಿಗಲ್ಲು ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ದೇಶದ ಭವಿಷ್ಯ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅಪಮಾನ. ಆದರ್ಶವಿಲ್ಲದೆ ಜೀವಿಸಿದರೆ ಬದುಕಿಗೆ ಅವಮಾನ ಎಂಬುದನ್ನು ಅರಿತು ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದ ಅತ್ಯದ್ಭುತ ಶೈಕ್ಷಣಿಕ ಕೇಂದ್ರವಾಗಿರುವ ಗುರುಕುಲ ಗ್ರಾಮೀಣ, ಬಡ, ಪ್ರತಿಭಾವಂತರ ಪಾಲಿನ ನಂದಾ ದೇಗುಲವಾಗಿದೆ ಎಂದು ಬಣ್ಣಿಸಿದರು.
ಬಡ ಹೆಣ್ಣು ಮಕ್ಕಳು ಸಾರಿಗೆ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗಬಾರದು, ಹೆಣ್ಣು ಮಕ್ಕಳು ಕುಟುಂಬಕ್ಕೆ ವರ ಎಂಬುದನ್ನು ಪಾಲಕರಿಗೆ ಮನವರಿಕೆ ಮಾಡಿಕೊಡಲು ಬಿ.ಎಸ್.ಯಡಿಯೂರಪ್ಪನವರು ಉಚಿತ ಬೈಸಿಕಲ್, ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಕಾರ್ಯಕ್ರಮ ಜಾರಿಗೆ ತಂದಿದ್ದರು ಎಂದು ತಿಳಿಸಿದರು. ಜನರ ಆಶೀರ್ವಾದದಿಂದ ತಂದೆಯವರಂತೆ ಉತ್ತಮ ಸಮಾಜೋಪಯೋಗಿ ಕಾರ್ಯಗಳನ್ನು ಮಾಡಬೇಕು ಎಂಬ ಹಂಬಲ ಹೊಂದಿದ್ದೇನೆ ಎಂದು ಹೇಳಿದರು. ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ,‘ಅನುಭವ ಮಂಟಪದ ಭೂಮಿ ಪೂಜೆ, ಅನುದಾನ ಬಿಡುಗಡೆಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣೀಕರ್ತರು’ ಎಂದರು.
ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಶಾಸಕ ಶರಣು ಸಲಗರ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬುಡಾ ಅಧ್ಯಕ್ಷ ಬಾಬು ವಾಲಿ, ಪ್ರಥಮ ದರ್ಜೆ ಗುತ್ತಿಗೆದಾರ ಗುರುನಾಥ ಕೊಳ್ಳೂರು, ಚಂದು ಪಾಟೀಲ, ಪ್ರಸನ್ನ ಖಂಡ್ರೆ, ವಾಸ್ತು ಶಿಲ್ಪಿಗಳಾದ ಜೆ.ಎಸ್.ಖಂಡೇರಾವ್, ಸಾಯಿಸೃಷ್ಟಿ ಇದ್ದರು. ಆಡಳಿತಾಧಿಕಾರಿ ಮೋಹನರೆಡ್ಡಿ ಸ್ವಾಗತಿಸಿದರು. ಪ್ರಾಚಾರ್ಯ ಬಸವರಾಜ ಮೊಳಕೀರೆ ಮಾತನಾಡಿದರು. ಮಧುಕರ ಗಾಂವ್ಕರ್ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.