
ಹುಲಸೂರ: ಮಹಾತ್ಮ ಗಾಂಧೀಜಿಯವರ ಗ್ರಾಮೀಣ ಅಭಿವೃದ್ಧಿ ಚಿಂತನೆ ಗ್ರಾಮ ಸ್ವರಾಜ್ಯದ ತತ್ವದ ಮೇಲೆ ಆಧಾರಿತವಾಗಿದೆ. ಭಾರತದ ಆತ್ಮ ಹಳ್ಳಿಗಳಲ್ಲಿದೆ ಎಂಬ ಗಾಂಧೀಜಿಯವರ ನಂಬಿಕೆಯಂತೆ ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿಗೆ ಪೂರಕ ಎಂದು ಶಾಸಕ ಶರಣು ಸಲಗರ ಹೇಳಿದರು.
ತಾಲ್ಲೂಕಿನ ಮುಚಳಂಬ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಹಾಗೂ 15ನೇ ಹಣಕಾಸು ನಿಧಿ ಅಡಿ ₹17.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಗ್ರಾಮ ಸೌಧ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಗ್ರಾಮ ಪಂಚಾಯಿತಿಗೆ ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡರೆ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಿದೆ ಎಂದು ಅವರು ತಿಳಿಸಿದರು. ಮುಚಳಂಬ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ₹1 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಜೆಜೆಎಂ (ಜಲ ಜೀವನ್ ಮಿಷನ್) ಕಾಮಗಾರಿ ಕಳೆದ ಐದು ವರ್ಷಗಳಿಂದ ಮುಂದುವರಿದಿದ್ದರೂ ಇನ್ನೂ ಪೂರ್ಣಗೊಂಡಿಲ್ಲ ಎಂದು ಸಾರ್ವಜನಿಕರು ಗಮನಕ್ಕೆ ತಂದಾಗ, ಸಂಪೂರ್ಣ ಕಾಮಗಾರಿ ಮುಗಿಯುವವರೆಗೆ ಅದನ್ನು ಗ್ರಾಮ ಪಂಚಾಯಿತಿಯ ಹಸ್ತಾಂತರಕ್ಕೆ ಪಡೆಯಬಾರದು ಎಂದು ಗ್ರಾಪಂ ಅಧ್ಯಕ್ಷೆಗೆ ಸೂಚಿಸಿದರು.
ಸಮಾರಂಭದ ಸಾನ್ನಿಧ್ಯ ವಹಿಸಿದ್ದ ನಾಗಭೂಷಣ ಶಿವಯೋಗಿ ಸಂಸ್ಥಾನ ಮಠದ ಪ್ರಣವಾನಂದ ಸ್ವಾಮೀಜಿ ಮಾತನಾಡಿದರು.
ಸಮಾರಂಭದಲ್ಲಿ ತಹಶೀಲ್ದಾರ್ ಶಿವಾನಂದ ಮೇತ್ರೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೋನಿಯಾ ಸಿದ್ಧಾರೂಢ ಪಾಟೀಲ, ಉಪಾಧ್ಯಕ್ಷೆ ಶಾಲು ಅನೀಲಕುಮಾರ ಸೋನಪೂರೆ, ಪಿಡಿಒ ಮಹಾರುದ್ರಪ್ಪ ಭರಮಶೆಟ್ಟೆ, ಮಾಜಿ ಅಧ್ಯಕ್ಷೆ ಮಾಲಾಶ್ರೀ ರವೀಂದ್ರ ಮೇತ್ರೆ ಸೇರಿದಂತೆ ಗ್ರಾ.ಪಂ ಸದಸ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. ಪ್ರಜ್ವಲ ಪತಂಗೆ ನಡೆಸಿದರು ನಿರೂಪಿಸಿದರು. ಸ್ವಾಗತ ಹಾಗೂ ವಂದನಾರ್ಪಣೆಯನ್ನು ಮಲ್ಲಿಕಾರ್ಜುನ ದೇವಪ್ಪ ನೆರವೇರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.