ಬಸವಕಲ್ಯಾಣ: ‘ಈ ಕ್ಷೇತ್ರದ ವಿಧಾನಸಭಾ ಉಪಚುನಾವಣೆಯಲ್ಲಿ ನಾನು 50 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದು 2023ರ ಸಾರ್ವತ್ರಿಕ ಚುನಾವಣೆಯಲ್ಲಿ ನನಗೆ ಮತದಾರರು ಪ್ರಥಮ ಸ್ಥಾನಕ್ಕೆ ತಂದು ನಿಲ್ಲಿಸಿ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ಮಾಲಾ ನಾರಾಯಣರಾವ್ ಹೇಳಿದರು.
ಇಲ್ಲಿನ ಬಿ.ನಾರಾಯಣ ರಾವ್ ಅವರ ಸಮಾಧಿ ಸ್ಥಳದಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ನಾನು ಸೋತಿದ್ದರೂ ಎಲ್ಲಿಗೂ ಹೋಗದೆ ಕ್ಷೇತ್ರದ ಜನರ, ಪಕ್ಷದ ಕಾರ್ಯಕರ್ತರ ಸೇವೆಯಲ್ಲಿರುತ್ತೇನೆ. ಶೀಘ್ರವೇ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಎದುರಾಗಲಿದ್ದು ಎಲ್ಲೆಡೆ ಪ್ರಚಾರ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ. ಪತಿ ಬಿ.ನಾರಾಯಣರಾವ್ ಕೂಡ ಮತದಾರರ ಮೇಲೆ ವಿಶ್ವಾಸವಿಟ್ಟು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದು ಸೇವೆ ಸಲ್ಲಿಸಿ ಶಾಸಕ ಆಗಿದ್ದರು. ನಾನೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತೇನೆ. ಮನೆ ಮಗಳಾಗಿ ಉಳಿದು ಬೆಂಬಲಿಗರ ಪ್ರತಿ ಕಾರ್ಯದಲ್ಲಿ ಭಾಗವಹಿಸುತ್ತೇನೆ’ ಎಂದರು.
ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ದಿಲೀಪ ಶಿಂಧೆ, ಗೌತಮ ನಾರಾಯಣರಾವ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.