ಬೀದರ್: ‘ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಎರಡು ಹಂತಗಳಲ್ಲಿ ಬಿಲ್ ಪಾವತಿಸಲು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಭರವಸೆ ಕೊಟ್ಟಿರುವುದರಿಂದ ಏ. 19ರಂದು ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಪ್ರತಿಭಟನೆಯನ್ನು ಮುಂದೂಡಲಾಗಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ತಿಳಿಸಿದ್ದಾರೆ.
ನಗರದಲ್ಲಿ ಭಾನುವಾರ ಸಚಿವರನ್ನು ಭೇಟಿ ಮಾಡಿ, ‘ಕಬ್ಬು ಪೂರೈಸಿದ ರೈತರ ಹಣ ಬಿಡುಗಡೆ ಸಂಬಂಧ ಮನವಿ ಪತ್ರ ಸಲ್ಲಿಸಿದಾಗ ಮೇಲಿನಂತೆ ಭರವಸೆ ಕೊಟ್ಟಿದ್ದಾರೆ. ಏಪ್ರಿಲ್ ತಿಂಗಳ ಕೊನೆಯ ವರೆಗೆ ರೈತರ ಒಟ್ಟು ಹಣದಲ್ಲಿ ಶೇ 80ರಷ್ಟು ಪಾವತಿಸಲಾಗುವುದು. ಮಿಕ್ಕುಳಿದ ಶೇ 20ರಷ್ಟು ಹಣವನ್ನು ಮೇ ತಿಂಗಳಲ್ಲಿ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ. ಸಚಿವರ ಭರವಸೆ ಮೇರೆಗೆ ನಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ’ ಎಂದು ತಿಳಿಸಿದ್ದಾರೆ.
‘ನಮ್ಮ ಮನವಿಗೆ ಸಚಿವರು ಸ್ಪಂದಿಸಿದ್ದಾರೆ. ಅವರು ಹೇಳಿದಂತೆ ಕಬ್ಬಿನ ಬಿಲ್ ಪಾವತಿಸಿದರೆ ಹೋರಾಟ ಸಂಪೂರ್ಣವಾಗಿ ಕೈಬಿಡಲಾಗುವುದು. ಒಂದುವೇಳೆ ಪಾವತಿ ಮಾಡದಿದ್ದಲ್ಲಿ ಬರುವ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.