
ಔರಾದ್: ತಾಲ್ಲೂಕಿನ ಕೌಠಾ (ಬಿ), ಬಲ್ಲೂರ್ (ಜೆ) ಗ್ರಾಮಗಳ ಮಹಿಳೆಯರು ತಮ್ಮ ಊರಿನಲ್ಲಿ ಮದ್ಯ ಮಾರಾಟ ಹಾವಳಿ ಹೆಚ್ಚಾಗಿದ್ದು, ಅದಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದರು.
ಶಾಸಕ ಪ್ರಭು ಚವಾಣ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಬುಧವಾರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಹಿಳೆಯರು ತಮ್ಮ ಸಮಸ್ಯೆ ಹೇಳಿಕೊಂಡರು.
‘ಗ್ರಾಮಗಳಲ್ಲಿ ಅಗ್ರಮ ಮದ್ಯ ಮಾರಾಟ ಹೆಚ್ಚಿದ್ದು ಇದರಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕುಟುಂಬದ ಆರ್ಥಿಕ ಸ್ಥಿತಿ ಕುಸಿಯುತ್ತಿದೆ. ಮನೆಗಳಲ್ಲಿ ಶಾಂತಿ ಹದಗೆಟ್ಟಿದೆ. ಮಹಿಳೆಯರು ಹಾಗೂ ಮಕ್ಕಳು ದೈನಂದಿನ ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೇಗಾದರೂ ಮಾಡಿ ನಮ್ಮ ಗ್ರಾಮದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಬೇಕು’ ಗ್ರಾಮದ ಮಹಿಳೆಯರು ಮನವಿ ಮಾಡಿಕೊಂಡರು.
ಮಹಿಳೆಯರ ಮನವಿ ಆಲಿಸಿದ ಶಾಸಕ ಪ್ರಭು ಚವಾಣ್, ಅಕ್ರಮ ಮದ್ಯ ಮಾರಾಟಕ್ಕೆ ತುರ್ತಾಗಿ ಕಡಿವಾಣ ಹಾಕುವಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಂಪೂರ್ಣ ಮದ್ಯಪಾನ ನಿಷೇಧ ಮಾಡಬೇಕು, ಈ ದಿಶೆಯಲ್ಲಿ ನಿರಂತರ ಪ್ರಯತ್ನ ಮುಂದುವರಿಸಲಾಗುವುದು ಎಂದರು.
ಈ ವರ್ಷ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ಬಿದ್ದು, ಸರ್ಮಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಕೌಡಗಾಂವ್, ಬಲ್ಲೂರ್, ಕೌಠಾ ಗ್ರಾಮಸ್ಥರು ತಿಳಿಸಿದರು. ನದಿ ಪಾತ್ರದ ಗ್ರಾಮಗಳ ರೈತರು ಕಬ್ಬು ಬೆಳೆದಿರುವುದರಿಂದ ಅವರಿಗೆ ಸಮರ್ಪಕ ವಿದ್ಯುತ್ ಪೂರೈಸಲು ಕ್ರಮ ಕೈಗೊಳಬೇಕು. ನೆಲಕ್ಕೆ ಬಿದ್ದ ಕಂಬಗಳು ಸರಿಪಡಿಸಬೇಕು ಎಂದು ಶಾಸಕರು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ್ ಮಹೇಶ ಪಾಟೀಲ, ತಾಲ್ಲೂಕು ಪಂಚಾಯತ್ ಇಒ ಕಿರಣ ಪಾಟೀಲ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಸಹಾಯಕ ಕೃಷಿ ನಿರ್ದೇಶಕ ಧುಳಪ್ಪ, ಮುಖಂಡ ಧೊಂಡಿಬಾ ನರೋಟೆ, ಶಿವಾಜಿರಾವ ಪಾಟೀಲ, ಖಂಡೋಬಾ ಕಂಗಟೆ, ಮಂಜು ಸ್ವಾಮಿ, ಪ್ರಕಾಶ ಜೀರ್ಗೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.