ಬೀದರ್: ಶಿಕ್ಷಣ ಮಹಿಳೆಯರ ಸರ್ವಾಂಗೀಣ ಪ್ರಗತಿಗೆ ದಾರಿ ಮಾಡಿಕೊಡುತ್ತದೆ. ಶಿಕ್ಷಣದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯವಿದೆ ಎಂದು ಪ್ರಾಚಾರ್ಯ ಪ್ರೊ. ಎಸ್.ಜಿ. ಹುಗ್ಗಿಪಾಟೀಲ ಹೇಳಿದರು.
ನಗರದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಮಹಿಳಾ ಸಬಲೀಕರಣ ಕುರಿತ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಣ ಲೋಕ ಜ್ಞಾನ ನೀಡುತ್ತದೆ. ಆತ್ಮಬಲ ಇಮ್ಮಡಿಗೊಳಿಸುತ್ತದೆ. ಅಸಮಾನತೆ, ಲಿಂಗ ತಾರತಮ್ಯ ಹೋಗಲಾಡಿಸಲು ಸಹ ನೆರವಾಗುತ್ತದೆ. ಕಾರಣ, ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುವ ಅಗತ್ಯವಿದೆ ಎಂದು ಹೇಳಿದರು.
ಪ್ರಸ್ತುತ ಮಹಿಳೆಯರು ಬಹುತೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಸಮಾಜ ಸೇವೆಗಾಗಿ ರಾಜಕೀಯ ಕ್ಷೇತ್ರದಲ್ಲೂ ತೊಡಗಿಸಿಕೊಳ್ಳಬೇಕು. ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು ಎಂದರು.
ಸಸಿಗೆ ನೀರೆರೆದು ಕಾರ್ಯಾಗಾರ ಉದ್ಘಾಟಿಸಿದ ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷ ಬಸವರಾಜ ದಿಂಡನೂರ ಮಾತನಾಡಿ, 12ನೇ ಶತಮಾನದಲ್ಲೇ ಸಮಾನತೆಯ ಸಮಾಜ ನಿರ್ಮಿಸಿದ ಶ್ರೇಯ ಬಸವಾದಿ ಶರಣರಿಗೆ ಸಲ್ಲುತ್ತದೆ ಎಂದು ನುಡಿದರು.
ಹೆಣ್ಣುಮಕ್ಕಳು ಕೀಳರಿಮೆಯನ್ನು ತೊಡೆದು ಹಾಕಬೇಕು. ಆತ್ಮವಿಶ್ವಾಸ ಹಾಗೂ ಸಾಧಿಸುವ ಛಲ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿದ್ದ ಅಂಚೆ ಅಧಿಕಾರಿ ಮಂಗಲಾ ಭಾಗವತ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕಿ ಉಮಾದೇವಿ ಚಿಲ್ಲರ್ಗಿ, ವಕೀಲೆ ಮಂಗಲಾ ದಾಡಗೆ ಅವರು, ಮಹಿಳಾ ಶಿಕ್ಷಣದ ಅಗತ್ಯತೆ, ಮಹಿಳೆಯರ ರಕ್ಷಣೆ ಕಾನೂನುಗಳು, ಆರ್ಥಿಕ ಸಬಲೀಕರಣಕ್ಕೆ ಇರುವ ಕಿರು ಸಾಲ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಭೌತವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ವಿಜಯಕುಮಾರ ಬಿರಾದಾರ, ಜೀವವಿಜ್ಞಾನ ವಿಭಾಗದ ಮುಖ್ಯಸ್ಥೆ ವೀಣಾಕುಮಾರಿ ಉಪಸ್ಥಿತರಿದ್ದರು.
ಗಂಗಾಂಬಿಕೆ ಪಾಟೀಲ ಸ್ವಾಗತಿಸಿದರು. ಸಂಗೀತಾ ಹಲಮಂಡಗೆ ನಿರೂಪಿಸಿದರು. ಮೀನಾ ಗಾಯಕವಾಡ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.