ADVERTISEMENT

ಸ್ವಚ್ಛತೆಗೆ ಆದ್ಯತೆ ಕೊಡಿ: ನಾಯ್ಕರ್‌

ಅಕ್ಷರ ದಾಸೋಹ ಯೋಜನೆ ಅಡುಗೆ ಸಿಬ್ಬಂದಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 14:07 IST
Last Updated 12 ಜನವರಿ 2022, 14:07 IST
ಭಾಲ್ಕಿಯ ಸಂಗಮೇಶ್ವರ ಪ್ರೌಢ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿ ತರಬೇತಿ ಕಾರ್ಯಾಗಾರವನ್ನು ತಾ.ಪಂ. ಕಾರ್ಯನಿರ್ವಾಕ ಅಧಿಕಾರಿ ದೀಪಿಕಾ ನಾಯ್ಕರ್ ಉದ್ಘಾಟಿಸಿದರು
ಭಾಲ್ಕಿಯ ಸಂಗಮೇಶ್ವರ ಪ್ರೌಢ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿ ತರಬೇತಿ ಕಾರ್ಯಾಗಾರವನ್ನು ತಾ.ಪಂ. ಕಾರ್ಯನಿರ್ವಾಕ ಅಧಿಕಾರಿ ದೀಪಿಕಾ ನಾಯ್ಕರ್ ಉದ್ಘಾಟಿಸಿದರು   

ಭಾಲ್ಕಿ: ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್ ಹೇಳಿದರು.

ಪಟ್ಟಣದ ಸಂಗಮೇಶ್ವರ ಪ್ರೌಢ ಶಾಲೆಯಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಅಕ್ಷರ ದಾಸೋಹ ಯೋಜನೆ ಅಡುಗೆ ಸಿಬ್ಬಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಅಕ್ಷರ ದಾಸೋಹ ಯೋಜನೆಯ ಮೂಲ ಉದ್ದೇಶ ಎಲ್ಲ ಮಕ್ಕಳು ಶಾಲೆಗೆ ಹಾಜರಾಗಿ ಅಕ್ಷರ ಕಲಿಯುವುದಾಗಿದೆ. ಹಾಗಾಗಿ ಬಿಸಿಯೂಟದ ಅಡುಗೆ ಸಿಬ್ಬಂದಿ ಮಕ್ಕಳಿಗೆ ರುಚಿ, ರುಚಿಯಾದ ಅಡುಗೆ ಮಾಡಿ ಬಡಿಸಿದ್ದಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯುವುದಿಲ್ಲ. ಪ್ರಸ್ತುತ ಸಾಲಿನಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಮ್ಮೆಲ್ಲರನ್ನೂ ಕಾಡುತ್ತಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ಕೊಡುವುದರೊಂದಿಗೆ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು ಎಂದು ಹೇಳಿದರು.

ADVERTISEMENT

ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ ಮಾತನಾಡಿ, ಅಕ್ಷರ ದಾಸೋಹ ಯೋಜನೆಯ ಅಡಿಯಲ್ಲಿ ಆಹಾರ ಧಾನ್ಯ ಹಂಚುವಾಗ ನಿರಂತರವಾಗಿ ಗೈರು ಹಾಜರಿದ್ದ ಮಕ್ಕಳಿಗೆ ಶಾಲೆಗೆ ಬರುವಂತೆ ಮಾಡಿ ಆಹಾರ ಧಾನ್ಯ ಹಂಚಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಇಲಾಖೆಯ ಡಾ.ನಂದಿನಿ ಬಿಸಿಯೂಟ ತಯಾರಿಸುವಾಗ ಅನುಸರಿಸಬೇಕಾದ ಆರೋಗ್ಯದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅಡುಗೆ ಅನಿಲ ಬಳಸುವ ಬಗ್ಗೆ ತಜ್ಞರಿಂದ ಮಾಹಿತಿ ನೀಡಲಾಯಿತು.

ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಕಾಂಬಳೆ ಬಿಸಿಯೂಟ ಯೋಜನೆಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು.

ಅಡುಗೆ ಸಿಬ್ಬಂದಿ ತಮ್ಮ ಗೌರವಧನ ಹೆಚ್ಚಿಸಬೇಕು ಎನ್ನುವ ಬೇಡಿಕೆ ಇಟ್ಟರು.
ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಕಾರ್ಯದರ್ಶಿ ದತ್ತು ಕಾಟಕರ, ಉಪಾಧ್ಯಕ್ಷ ಜಯರಾಜ ದಾಬಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಕಾರ್ಯದರ್ಶಿ ಅಶೋಕ ಕುಂಬಾರ, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ರಾಜಕುಮಾರ ಜೊಳದಪಕೆ, ವಿರಶೆಟ್ಟಿ ಇಟಗೆ ಇದ್ದರು.

ಸಿಆರ್‌ಪಿ ಚಂದ್ರಕಾಂತ ತಳವಾಡೆ ಸ್ವಾಗತಿಸಿದರು. ಸಿಆರ್‌ಪಿ ವಿಜಯಕುಮಾರ ನಿರೂಪಿಸಿದರು. ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದರಾವ್‌ ಬಿರಾದರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.