ಬೀದರ್: ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಗರ ಯುವ ಘಟಕದ ಕಾರ್ಯಕರ್ತರು ನಗರದಲ್ಲಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ವೃತ್ತದ ಬಳಿ ಸೇರಿ 9 ನಿಮಿಷ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅನೇಕ ತಪ್ಪು ನಿರ್ಧಾರಗಳಿಂದಾಗಿ ದೇಶದ ಆರ್ಥಿಕತೆಗೆ ತೀವ್ರ ಧಕ್ಕೆ ಉಂಟಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಎಹಸನ್ ಕಮಲ್ ಪರ್ವೇಜ್ ಆರೋಪಿಸಿದರು.
ಅಧಿಕ ಮುಖಬೆಲೆಯ ನೋಟುಗಳ ರದ್ದತಿಯಿಂದ ಜನರಿಗೆ ತೊಂದರೆಯಾಯಿತು. ಜಿಎಸ್ಟಿ ಜಿಡಿಪಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತು. ಪೂರ್ವ ಸಿದ್ಧತೆ ಇಲ್ಲದೆ ಲಾಕ್ಡೌನ್ ಮಾಡಿದ್ದರಿಂದ ಸುಮಾರು 12 ಕೋಟಿ ಜನ ಉದ್ಯೋಗ ಕಳೆದುಕೊಂಡರು ಎಂದು ಟೀಕಿಸಿದರು.
ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಬೇಕು. ಕೇಂದ್ರ ಸರ್ಕಾರದ ಉದ್ಯಮಗಳ ಖಾಸಗೀಕರಣ ಕೈಬಿಡಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಶೇಖ ಅಕ್ಮಲ್, ಬೀದರ್ ನಗರ ಘಟಕದ ಅಧ್ಯಕ್ಷ ಅಜರ್ಖಾನ್, ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಡಿ.ಕೆ. ಸಂಜುಕುಮಾರ, ಮುಖಂಡರಾದ ಅಬ್ದಲ್ ನಯೀಮ್, ಸಂಜು ರಾಮದಾಸ, ಅಮರ ಸಾಗರ, ಸೈಯದ್ ಖಿಜರ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.