ADVERTISEMENT

ಅಣ್ಣಾಗೆ ಬೆಂಬಲದ ಮಹಾಪೂರ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2011, 9:25 IST
Last Updated 25 ಆಗಸ್ಟ್ 2011, 9:25 IST
ಅಣ್ಣಾಗೆ ಬೆಂಬಲದ ಮಹಾಪೂರ
ಅಣ್ಣಾಗೆ ಬೆಂಬಲದ ಮಹಾಪೂರ   

ಚಾಮರಾಜನಗರ: ಬಲಿಷ್ಠ ಜನಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ಗಾಂಧಿವಾದಿ ಅಣ್ಣಾ ಹಜಾರೆ ಹಮ್ಮಿಕೊಂಡಿರುವ ಹೋರಾಟಕ್ಕೆ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವ ಮೂಲಕ ಅಣ್ಣಾ ಹಜಾರೆ ಅವರ ಉಪವಾಸ ಸತ್ಯಾಗ್ರಹ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

ತಾಲ್ಲೂಕಿನ ಬ್ಯಾಡಮೂಡ್ಲು ಗ್ರಾಮದಲ್ಲಿ ಯುವಕರು ಕೂಡಲೇ ಮಸೂದೆ ಜಾರಿಗೆ ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಿದರು. ಅಂಕನಶೆಟ್ಟಿಪುರದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.

ಸರ್ಕಾರಿ ಕಾಲೇಜು: ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಅಣ್ಣಾ ಹೋರಾಟಕ್ಕೆ ಬೆಂಬಲ ಘೋಷಿಸಿದರು. ಒಂದು ವಾರದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಪ್ರಬಲ ಜನಲೋಕಪಾಲ ಮಸೂದೆ ಜಾರಿಗೆ ಕೇಂದ್ರ ಸರ್ಕಾರ ಹಿಂದೇಟು ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರಿದ ಸತ್ಯಾಗ್ರಹ: ಜಿಲ್ಲಾಡ ಳಿತ ಭವನದ ಮುಂಭಾಗ ಭ್ರಷ್ಟಾಚಾರದ ವಿರುದ್ಧ ಭಾರತ- ಅಣ್ಣಾ ನಿಮ್ಮಂದಿಗೆ ನಾವು ವೇದಿಕೆಯಿಂದ ಹಮ್ಮಿಕೊಂಡಿರುವ ಸತ್ಯಾ ಗ್ರಹ ಮುಂದುವರಿದಿದೆ. ಜೀವವಿಮಾ ಸಂಘದ ಪ್ರತಿನಿಧಿಗಳು ಕೂಡ ಅಣ್ಣಾ ಹೋರಾಟಕ್ಕೆ ಬೆಂಬಲ ಸೂಚಿಸಿ ಧರಣಿ ನಡೆಸಿದರು.

ಬಿಜೆಪಿಯಿಂದ ಪ್ರತಿಭಟನೆ: ಪ್ರಬಲ ಮಸೂದೆ ಜಾರಿಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯವಹಿಸಿದೆ ಎಂದು ಆರೋಪಿಸಿ ಬಿಜೆಪಿ ನಗರ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಣ್ಣಾ ಅವರ ತಂಡ ಮಂಡಿಸಿರುವ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಮಹದೇವನಾಯಕ, ಆರ್. ಸುಂದರ್, ಸುಂದರ್‌ರಾಜ್ ಇತರರು ಪಾಲ್ಗೊಂಡಿದ್ದರು.
ಯೂನಿವರ್ಸ್ ಶಾಲೆ: ನಗರದ ಯೂನಿವರ್ಸ್ ಶಾಲೆಯ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಪ್ರತಿಭಟನೆ ನಡೆಸಿ ಅಣ್ಣಾ ಪರವಾಗಿ ಜೈಕಾರ ಮೊಳಗಿಸಿದರು.

ಅಣ್ಣಾ ಹಜಾರೆ ಅವರನ್ನು ಬೆಂಬಲಿಸಿ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು. ನಾಗರಿಕ ಸಮುದಾಯದ ಪ್ರತಿನಿಧಿಗಳು ಸಿದ್ಧಪಡಿಸಿರುವ ಮಸೂದೆಯನ್ನು ಸಂಸತ್‌ನಲ್ಲಿ ಮಂಡಿಸಬೇಕು. ದೇಶದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಅಣ್ಣಾ ಹೋರಾಟ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಅವರಿಗೆ ಬೆಂಬಲ ಘೋಷಿಸಬೇಕು ಎಂದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷೆ ವಿಜಯಲಕ್ಷ್ಮೀ, ಕಾರ್ಯದರ್ಶಿ ಸುಬ್ರಹ್ಮಣ್ಯ, ಶಿಕ್ಷಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.