ADVERTISEMENT

ಆಮಿಷಕ್ಕೆ ಬಲಿಯಾಗಬೇಡಿ: ಮಹಿಳೆಯರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2014, 7:03 IST
Last Updated 24 ಮಾರ್ಚ್ 2014, 7:03 IST

ಚಾಮರಾಜನಗರ: ‘ಮಹಿಳೆಯರು ಪೂರ್ಣ ಪ್ರಮಾಣದಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಚುನಾವಣೆ ಯಶಸ್ವಿಯಾಗಿ ಉತ್ತಮ ಜನತಂತ್ರ ವ್ಯವಸ್ಥೆ ರೂಪಿಸಲು ಸಾಧ್ಯ’ ಎಂದು ಜಿಲ್ಲಾ ಮತದಾರರ ಜಾಗೃತಿ ಅಭಿಯಾನ ಸಮಿತಿಯ ಅಧ್ಯಕ್ಷ ಡಾ.ಕೆ.ಎಚ್. ನರಸಿಂಹಮೂರ್ತಿ ಹೇಳಿದರು.

ನಗರದ ಕೆಡಿಪಿ ಸಭಾಂಗಣದಲ್ಲಿ ಇತ್ತೀಚೆಗೆ ಮತದಾರರ ಜಾಗೃತಿ ಅಭಿಯಾನ ಸಮಿತಿಯಿಂದ ನಡೆದ ಸ್ತ್ರೀಶಕ್ತಿ ಸಂಘಗಳು ಹಾಗೂ ಮಹಿಳಾ ಸ್ವಸಹಾಯ ಗುಂಪುಗಳ ಒಕ್ಕೂಟದ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಜನಸಂಖ್ಯೆಯಲ್ಲಿ ಮಹಿಳೆಯರು ಪುರುಷರಿಗೆ ಸರಿಸಮಾನ ರಾಗಿದ್ದರೂ, ಮತದಾನ ಪ್ರಕ್ರಿಯೆಯಲ್ಲಿ ಮಾತ್ರ ಹಿಂದೆ ಉಳಿದಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವುದಿಲ್ಲ ಎಂದರು.

ಅರ್ಧದಷ್ಟು ಜನ ಮತದಾನದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸದೆ ಹೋದಲ್ಲಿ ಅದು ಜನತಂತ್ರ ವ್ಯವಸ್ಥೆಗೆ ದೊಡ್ಡ ಅಪಾಯ ತಂದೊಡ್ಡಲಿದೆ ಎಂದ ಅವರು, ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಸ್ತ್ರೀಶಕ್ತಿ, ಮಹಿಳಾ ಸ್ವಸಹಾಯ ಸಂಘಗಳಿವೆ. ಮಹಿಳೆಯರು ಮನಸ್ಸು ಮಾಡಿದರೆ ಪುರುಷರನ್ನೂ ಮಾತದಾನದಲ್ಲಿ ಸಂಪೂರ್ಣವಾಗಿ ತೊಡಗಿಸುವಂತೆ ಮಾಡಬಲ್ಲ ಶಕ್ತಿ ಹೊಂದಿದ್ದಾರೆ ಎಂದು ಹೇಳಿದರು.

ಯಾವುದೇ, ಕಾರಣಕ್ಕೂ ಸ್ತ್ರೀಶಕ್ತಿ ಸಂಘಗಳು ಹಾಗೂ ಸ್ವಸಹಾಯ ಗುಂಪುಗಳು ಹಣದ ಆಮಿಷಕ್ಕೆ ಬಲಿಯಾಗಬಾರದು. ಹಣಕ್ಕಾಗಿ ತಮ್ಮ ಮತವನ್ನು ಮಾರಾಟ ಮಾಡಿಕೊಳ್ಳಬಾರದು ಎಂದರು.

ಸಭೆಯಲ್ಲಿ ಹಾಜರಿದ್ದ 200ಕ್ಕೂ ಹೆಚ್ಚು ಸ್ತ್ರೀಶಕ್ತಿ ಒಕ್ಕೂಟದ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಯೋಜನಾಧಿಕಾರಿ ವಸುಂಧರಾ ದೇವಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಭಾಸ್ಕರ್, ಬಸವರಾಜು, ಸದಾನಂದ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.