ADVERTISEMENT

ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ

ಶಸ್ತ್ರ ಚಿಕಿತ್ಸೆಗೊಳಪಟ್ಟ ಮಹಿಳೆ ಸಾವು, ಉತ್ತಂಬಳ್ಳಿ ಗ್ರಾಮಸ್ಥರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2018, 6:21 IST
Last Updated 15 ಏಪ್ರಿಲ್ 2018, 6:21 IST

ಯಳಂದೂರು: ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ಮಹಿಳೆ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಸಂಬಂಧಿಗಳು ಶನಿವಾರ ಸಂಜೆ ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದರು.

ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಜಯಮ್ಮ (35) ಮೃತಪಟ್ಟವರು. ಇವರಿಗೆ ಗರ್ಭಕೋಶ ಸಂಬಂಧಿ ಕಾಯಿಲೆ ಇದ್ದುದರಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ವಾರದ ಹಿಂದೆ ದಾಖಲಾಗಿದ್ದರು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಗರ್ಭಕೋಶ ತೆಗೆದಿದ್ದರು. ಆದರೂ ಇವರಿಗೆ ನೋವು ನಿಂತಿರಲಿಲ್ಲ.

ಶನಿವಾರ ಬೆಳಿಗ್ಗೆ ನೋವು ಹೆಚ್ಚಾಗಿ ಹೊಟ್ಟೆ ಉಬ್ಬರಿಸಿತ್ತು. ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ಸೂಚಿಸಿದ್ದರು.ಮೈಸೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ADVERTISEMENT

ಗ್ರಾಮಸ್ಥರ ಪ್ರತಿಭಟನೆ: ‘ಮಹಿಳೆ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ. ಇಂಥ ಘಟನೆಗಳು ಮತ್ತೆ ಮರುಕಳಿಸಬಾರದು, ನಮಗೆ ನ್ಯಾಯ ದೊರಕುವವರೆಗೂ ಶವ ಹಿಂಪಡೆಯುವುದಿಲ್ಲ’ ಎಂದು ಉತ್ತಂಬಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯ ಮುಂಭಾಗ ಶವವಿಟ್ಟು, ವೈದ್ಯರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು.

ಮೃತ ಮಹಿಳೆ ಉತ್ತಂಬಳ್ಳಿ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.ಇವರಿಗೆ ಪತಿ ಗೋವಿಂದರಾಜು ಹಾಗೂ ಇಬ್ಬರು ಪುತ್ರರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.