ಚಾಮರಾಜನಗರ: `ಸರ್ಕಾರದ ವಿವಿಧ ಯೋಜನೆಗಳ ಅನುದಾನ ಬಳಸಿಕೊಂಡು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರವಹಿಸಲಾಗುವುದು' ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.
ತಾಲ್ಲೂಕಿನ ಬಂದಿಗೌಡನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ನಿರ್ಮಿಸುವ ಓವರ್ಹೆಡ್ ಟ್ಯಾಂಕ್ನ ನಿರ್ಮಾಣಕ್ಕೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಬರ ಪರಿಹಾರ ಯೋಜನೆಯಡಿ ಈಗಾಗಲೇ 80ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಯಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಯೋಜನೆಯಡಿ ಅನುಧಾನ ಲಭ್ಯವಿದ್ದು ಕುಡಿಯುವ ನೀರಿಗೆ ಕೊರತೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.
`ತಾಲ್ಲೂಕಿನ ಗಡಿ ಪ್ರದೇಶಗಳ ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದ್ದು ಶೀಘ್ರವೇ ಚಿಕ್ಕಹೊಳೆ- ಎಲ್ಲೆಕಟ್ಟೆ, ಅರಕಲವಾಡಿ- ಎತ್ತಿಗಟ್ಟಿಬೆಟ್ಟ, ಕೋಡಿಉಗನೆ-ಬಂದಿಗೌಡನಹಳ್ಳಿ ರಸ್ತೆಗಳನ್ನು ತ್ವರಿತವಾಗಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು' ಎಂದು ಹೇಳಿದರು.
ಬಿಸಲವಾಡಿ ಗ್ರಾಮದಲ್ಲಿ ಗಿರಿಜನ ಉಪಯೋಜನೆಯಡಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದರು.
ಮುಂದಿನ ರಾಜ್ಯ ಬಜೆಟ್ ನಂತರ ದೊರಕುವ ಅನುದಾನದಲ್ಲಿ ತಾಲ್ಲೂಕಿನಾದ್ಯಂತ ಹಿಂದುಳಿದ ವರ್ಗದವರು ವಾಸಿಸುವ ಗ್ರಾಮಗಳಲ್ಲಿ ರಸ್ತೆ, ಚರಂಡಿ ಕಾಮಗಾರಿಗಳನ್ನು ನಿರ್ಮಿಸಿ ಅವರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಮಾಜಿ ಅಧ್ಯಕ್ಷ ಬಿ. ಶಾಂತಮಲ್ಲಪ್ಪ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣ ನಾಯಕ, ಗುತ್ತಿಗೆದಾರ ಉಮೇಶ್, ಮುಖಂಡರಾದ ಪ್ರಭುಸ್ವಾಮಿ, ಬಾಬು, ಮಹದೇವಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.