ADVERTISEMENT

ಜಿಲ್ಲೆಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ: ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2011, 7:05 IST
Last Updated 22 ಫೆಬ್ರುವರಿ 2011, 7:05 IST

ಚಾಮರಾಜನಗರ: ಕಾವೇರಿ, ಕಪಿಲ ನದಿಯಿಂದ ಕುಡಿಯುವ ನೀರಿನ 2ನೇ ಹಂತದ ಯೋಜನೆ ಜಾರಿ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲು ಆಗ್ರಹಿಸಿ ನಗರದಲ್ಲಿ ಸೋಮವಾರ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ಪ್ರತಿಭಟನೆ ನಡೆಯಿತು.ಚಾಮರಾಜೇಶ್ವರ ದೇವಸ್ಥಾನ ದಿಂದ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಡಿ ಮೆರವಣಿಗೆ ಆರಂಭಗೊಂಡಿತು. ಜೋಡಿರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಫೆ. 24ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಅದರಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು. ಎಲ್ಲಾ ಹಳ್ಳಿಗಳಿಗೂ ನದಿಪಾತ್ರದಿಂದ ಕುಡಿಯುವ ನೀರು ಪೂರೈಸಬೇಕು. ನೆನೆಗುದಿಗೆ ಬಿದ್ದಿರುವ ಚಾ.ನಗರದ ಒಳಚರಂಡಿ ಕಾಮಗಾರಿ ಪ್ರಾರಂಭಿಸಬೇಕು. ಚೂಡಾ ಮೂಲಕ ಒಂದು ಸಾವಿರ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಮಲೆಮಹದೇಶ್ವರ ಬೆಟ್ಟಕ್ಕೆ ಕುಡಿಯುವ ನೀರಿಗಾಗಿ ಉಳಿಕೆ ಹಣವನ್ನು ದೇವಸ್ಥಾನದಿಂದ ತೆಗೆದು ಕೊಳ್ಳಬಾರದು. ಸರ್ಕಾರದಿಂದಲೇ ಬಿಡುಗಡೆ ಮಾಡಬೇಕು. ಚಾಮರಾಜೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಕೋಟಿ ರೂ ಮೀಸಲಿಡಬೇಕು. ಚಾಮರಾಜನಗರ -ನಂಜನಗೂಡು ರಸ್ತೆ ದುರಸ್ತಿ ಮಾಡಬೇಕು. ಜಿಲ್ಲೆಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಯಾತ್ರಿ ನಿವಾಸ ನಿರ್ಮಿಸಬೇಕು. ಪ್ರವಾಸೋದ್ಯಮ ಕೇಂದ್ರವಾಗಿ ಹೊಗೇನಕಲ್ ಅಭಿವೃದ್ಧಿಪಡಿಸಬೇಕು. ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ಸಿಬ್ಬಂದಿ ನೇಮಕ ಮಾಡಬೇಕು. ಬೆಂಗಳೂರು-ಚಾಮರಾಜನಗರ ಹೊಸ ರೈಲು ಮಾರ್ಗ ಅನುಷ್ಠಾನಕ್ಕೆ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಸಂತೇಮರಹಳ್ಳಿಗೆ ತಾಲ್ಲೂಕು ಕೇಂದ್ರದ ಮಾನ್ಯತೆ ನೀಡಬೇಕು. ಚಾ.ನಗರ ಕೆಎಸ್‌ಆರ್‌ಟಿಸಿ ಡಿಪೋದಿಂದ ಮೈಸೂರು ಸೇರಿದಂತೆ ವಿವಿಧೆಡೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಮುಖಂಡರಾದ ಶಾ. ಮುರಳಿ, ಚಾ.ವೆಂ. ರಾಜಗೋಪಾಲ್, ಕಾರ್‌ನಾಗೇಶ್, ಸುರೇಶ್‌ನಾಗ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.