ಕೊಳ್ಳೇಗಾಲ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಹಿಂದೂ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ನೀತಿ ವಿರುದ್ಧ ಪಟ್ಟಣದಲ್ಲಿ ಗುರುವಾರ ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ಮಾರಮ್ಮ ದೇವಾಲಯದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಧಾರ್ಮಿಕ ಕೇಂದ್ರಗಳನ್ನು ನೆಲಸಮಗೊಳಿಸುವ ಕ್ರಮದ ವಿರುದ್ಧ ಘೋಷಣೆ ಕೂಗಿದರು. ನಂತರ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿದರು.
ತಾಲ್ಲೂಕಿನಲ್ಲಿ 13 ದೇವಾಲಯ ನೆಲಸಮಗೊಳಿಸಲು ತಾಲ್ಲೂಕು ಆಡಳಿತ ಮುಂದಾಗಿದೆ. ಈ ಬಗ್ಗೆ ದೇವಸ್ಥಾನದ ಅರ್ಚಕರಿಗೆ ಸೂಚನೆ ನೀಡಿದೆ. ಯಾವುದೇ, ಕಾರಣಕ್ಕೂ ನೆಲಸಮಗೊಳಿಸಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನ್ಯಾಯಾಲಯದ ಆದೇಶದನ್ವಯ ಧಾರ್ಮಿಕ ಕೇಂದ್ರಗಳ ಬಗ್ಗೆ ಪರಿಶೀಲಿಸಿಲ್ಲ. ಏಕಾಏಕಿ ಅನಧಿಕೃತ ಕಟ್ಟಡವೆಂದು ಪರಿಗಣಿಸಲಾಗಿದೆ. ಧ್ವಂಸಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ರಾಜ್ಯದಲ್ಲಿ 5 ಸಾವಿರ ಹಿಂದೂ ಧಾರ್ಮಿಕ ಕೇಂದ್ರಗಳನ್ನು ನೆಲಸಮಗೊಳಿಸಲಾಗಿದೆ ಎಂದು ದೂರಿದರು. ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯ ಶಿವರಾಮ್ ಅವರು, ಸಹಾಯಕ ತಹಶೀಲ್ದಾರ್ ಸಿದ್ದಪ್ಪ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಶ್ರೀವಿನಾಯಕ ದೇವಾಲಯದ ಅರ್ಚಕ ರಾಘವನ್, ಅಚ್ಗಾಳ್ ಯಾತ್ರಿ ನಿವಾಸ್ ಮಾಲೀಕ ನಾಗರಾಜು, ನರೇಂದ್ರ, ನಂದಕುಮಾರ್, ಶ್ರೀನಿವಾಸ್, ಶಶಿ ಕುಮಾರ್, ಅರ್ಚಕರು, ಮುಖಂಡರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.