ADVERTISEMENT

ನದಿ ಮೂಲ ಸಂರಕ್ಷಣೆಗೆ ಜನರ ಸಹಕಾರ ಅಗತ್ಯ

​ಪ್ರಜಾವಾಣಿ ವಾರ್ತೆ
Published 8 ಜನವರಿ 2011, 8:40 IST
Last Updated 8 ಜನವರಿ 2011, 8:40 IST

ಚಾಮರಾಜನಗರ: ‘ನದಿ ಮೂಲ ಸಂರಕ್ಷಣೆಗಾಗಿ ರಾಜ್ಯದ ವಿವಿಧೆಡೆ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ’ ಎಂದು ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತಹೆಗಡೆ ಆಶೀಸರ ಹೇಳಿದರು. ಕೊಳ್ಳೇಗಾಲ ತಾಲ್ಲೂಕಿನ ಹಳೇ ಹಂಪಾಪುರದ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಪಶ್ಚಿಮಘಟ್ಟ ಕಾರ್ಯಪಡೆ, ಅರಣ್ಯ ಇಲಾಖೆ ಹಾಗೂ ಜನಶಕ್ತಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ನಡೆದ ನದಿ ಮೂಲ ಸಂರಕ್ಷಣಾ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನದಿ ಮೂಲ, ಕಣಿವೆ ಇತರೇ ಜಲ ಮೂಲಗಳ ಸಂರಕ್ಷಣೆಗೆ ಸರ್ಕಾರ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಜನರ ಸಹಭಾಗಿತ್ವ ಅಗತ್ಯ. ಜನರಲ್ಲಿ ಜಲ ಮೂಲಗಳ ಉಳಿಗೆ ಜಾಗೃತಿ ಮೂಡಿಸಬೇಕಿದೆ. ಆಂದೋಲನದಿಂದ ಸಂರಕ್ಷಣೆ ಕಾರ್ಯ ಯಶಸ್ವಿಯಾಗಲಿದೆ ಎಂದರು. ಪಶ್ಚಿಮಘಟ್ಟಗಳಲ್ಲಿರುವ ಜೈವಿಕ ತಾಣ, ಔಷಧಿ, ಗಿಡಮೂಲಿಕೆ ರಕ್ಷಿಸುವ ಕಾರ್ಯಕ್ರಮ ರೂಪಿಸಲಾಗಿದೆ. ಬಯಲು ಪ್ರದೇಶದಲ್ಲಿ ಗಿಡ, ಮರ ಬೆಳೆಸಿ ಅರಣ್ಯದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕಾವೇರಿ ನದಿ ಹರಿಯುತ್ತಿದೆ. ಇದಕ್ಕೆ ಸುವರ್ಣಾವತಿ, ಮಾಯಾರ್, ಕೌಂಡಿನ್ಯ, ಚಿಕ್ಕಹೊಳೆಯಂಥ  ಉಪನದಿ, ಹಳ್ಳ-ಕೊಳ್ಳ ಸೇರುತ್ತಿವೆ. ಇವುಗಳ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಬೇಕಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸುವರ್ಣಾವತಿ ಕಣವೆ ಪ್ರದೇಶದ ಸಂರಕ್ಷಣೆಗೆ ವಿಶೇಷ ಕಾರ್ಯಕ್ರಮ ಹಾಕಿಕೊಳ್ಳಬೇಕು ಅರಣ್ಯ, ನದಿಮೂಲ ಸಂರಕ್ಷಣೆಗೆ ಕಾರ್ಯಕ್ಕೆ ಸರ್ಕಾರದೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಸುಂದರನಾಯಕ್ ಮಾತನಾಡಿ, ಪರಿಸರ ರಕ್ಷಣೆ, ಗ್ರಾಮ ನೈರ್ಮಲ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ತಿಳಿವಳಿಕೆ ಮೂಡಿಸಲು ಶಿಕ್ಷಕರು ಮುಂದಾಗಬೇಕು ಎಂದು ಸಲಹೆ ನೀಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಂ. ನಾರಾಯಣಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ಚಾಮರಾಜನಗರ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಶೇಖರ್, ತಹಶೀಲ್ದಾರ್ ಡಾ.ವೆಂಕಟೇಶ್‌ಮೂರ್ತಿ, ಡಿಡಿಪಿಐ ಬಿ.ಎ. ರಾಜಶೇಖರ್, ಜಂಟಿ ಕೃಷಿ ನಿರ್ದೇಶಕ ಬಿ.ಎಂ. ಶಿವಮಲ್ಲು, ಜಿಲ್ಲಾ ಜಲಾನಯನ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಕೆ. ಸಿಂಗ್ ಇತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಅನಂತಹೆಗಡೆ ಆಶೀಸರ ಅವರು ಹಳೇ ಹಂಪಾಪುರ ಬಳಿ ಇರುವ ಸುವರ್ಣಾವತಿ ಕಾವೇರಿ ಸಂಗಮದಲ್ಲಿ ನದಿಗೆ ಪೂಜೆ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.