ADVERTISEMENT

ಪರಿಶಿಷ್ಟರಿಗೆ ಸೌಲಭ್ಯ ನೀಡಲು ಕ್ರಮ

​ಪ್ರಜಾವಾಣಿ ವಾರ್ತೆ
Published 11 ಜುಲೈ 2012, 7:40 IST
Last Updated 11 ಜುಲೈ 2012, 7:40 IST
ಪರಿಶಿಷ್ಟರಿಗೆ ಸೌಲಭ್ಯ ನೀಡಲು ಕ್ರಮ
ಪರಿಶಿಷ್ಟರಿಗೆ ಸೌಲಭ್ಯ ನೀಡಲು ಕ್ರಮ   

ಗುಂಡ್ಲುಪೇಟೆ: ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಸಮರ್ಪಕವಾಗಿ ಕೊಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಕವಿತಾ ಮಂಗಳವಾರ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುರಸಭೆಗೆ ಸೇರಿದ ವಾಣಿಜ್ಯ ಮಳಿಗೆಗಳನ್ನು ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲಾತಿಗೊಳಪಡಿಸಿ ಒಂದು ತಿಂಗಳೊಳಗಾಗಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ವಿವಿಧ ಇಲಾಖೆಗಳು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಲು ಕ್ರಮ ಕೈಗೊಂಡಿಲ್ಲ ಕೂಡಲೇ ಕ್ರಮ ಜರುಗಿಸಿ ವರದಿ ಸಲ್ಲಿಸ ಬೇಕೆಂದು ಆದೇಶಿಸಿದರು.

ಸೆಸ್ಕ್ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಸೇರಿದ 143 ಕೊಳವೆ ಬಾವಿಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಕೂಡಲೇ ಕ್ರಮ ಕೈಗೊಳ್ಳಿ ಎಂದು ಬಹುಜನ ಸಮಾಜ ಪಕ್ಷದ ಪ್ರಧಾನ ಕಾರ್ಯದರ್ಶಿ ಕಾಂತರಾಜು ತಿಳಿಸಿದರು. ಯಾವ ಇಲಾಖೆಯಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಕೆಲಸಗಳಾಗಿಲ್ಲ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ರಾಜೇಶ್ವರಿ ಎಂಬಾಕೆಗೆ ಅಂಗನವಾಡಿ ಕಾರ್ಯಕರ್ತೆಯ ಹುದ್ದೆಯನ್ನು ನೀಡ ಬೇಕೆಂದು ಕಳೆದ ಸಭೆಯಲ್ಲಿ ತೀರ್ಮಾನಿಸಿದ ಕಾರಣ ಅವರಿಗೆ ಹುದ್ದೆ ನೀಡಿರುವುದನ್ನು ಬಿಟ್ಟರೆ ವಿವಿಧ ಇಲಾಖೆಗಳು ಸೌಲಭ್ಯ ವಿತರಿಸುವಲ್ಲಿ ವಿಫಲವಾಗಿವೆ ಎಂದು ಹೇಳಿದರು.

ಈ ಸಭೆಯಲ್ಲಿ ಸಮಿತಿಗೆ ಪರಿಶಿಷ್ಟ ಜಾತಿಯ ಪರವಾಗಿ ಕಾಂತರಾಜು ಮತ್ತು ಪರಿಶಿಷ್ಟ ವರ್ಗದ ಪರವಾಗಿ ಬೇರಂಬಾಡಿ ಗ್ರಾಮದ ಸಿದ್ಧಪ್ಪಾಜಿ ಅವರನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಜಯಸಾರಥಿ, ಸೆಸ್ಕ್‌ನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಿದ್ದಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಮದ್ದಾನಸ್ವಾಮಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಹೊನ್ನೇಗೌಡ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಟಿ. ರಾಜಣ್ಣ, ಸಹಾಯಕ ಕೃಷಿ ನಿರ್ದೇಶಕಿ ಲೀಲಾವತಿ, ತಾಲ್ಲೂಕು ಪಂಚಾಯಿತಿ ಸದಸ್ಯ ಮಲ್ಲಿದಾಸ್, ಪುಟ್ಟಹನುಮಯ್ಯ, ಬಹುಜನ ಸಮಾಜ ಪಕ್ಷದ ನಾಗರಾಜು, ಬಸವಣ್ಣ, ಮಾಧುಸ್ವಾಮಿ, ಬಿಜೆಪಿಯ ಕಬ್ಬಹಳ್ಳಿ ನಂಜುಂಡಸ್ವಾಮಿ, ಆದಿ ಜಾಂಬವ ಸಂಘದ ಸಿದ್ದಯ್ಯ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಾಗರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.