ADVERTISEMENT

ಪರಿಷತ್ ಚುನಾವಣೆ: ವೇಳಾಪಟ್ಟಿ ಪ್ರಕಟ

ಚಾಮರಾಜನಗರ, ಮೈಸೂರು, ಹಾಸನ, ಮಂಡ್ಯ ಜಿಲ್ಲಾ ವ್ಯಾಪ್ತಿ

​ಪ್ರಜಾವಾಣಿ ವಾರ್ತೆ
Published 17 ಮೇ 2018, 8:35 IST
Last Updated 17 ಮೇ 2018, 8:35 IST

ಚಾಮರಾಜನಗರ: ಕರ್ನಾಟಕ ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈ ವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದೆ.

ಮೇ 15ರಂದು ಅಧಿಸೂಚನೆ ಹೊರಡಿಸಲಾಗಿದೆ. ನಾಮಪತ್ರ ಸಲ್ಲಿಸಲು ಮೇ 22 ಕಡೆಯ ದಿನ. ನಾಮಪತ್ರಗಳ ಪರಿಶೀಲನಾ ಕಾರ್ಯವು ಮೇ 23ರಂದು ನಡೆಯಲಿದೆ. ಉಮೇದು ವಾರಿಕೆ ಹಿಂತೆಗೆದುಕೊಳ್ಳಲು ಮೇ 25 ಕಡೆಯ ದಿನ. ಜೂನ್ 8ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತ ದಾನ ನಡೆಯಲಿದೆ. ಜೂನ್ 12ರಂದು ಬೆಳಿಗ್ಗೆ 8 ಗಂಟೆಗೆ ಮತಗಳ ಎಣಿಕೆ ಕಾರ್ಯ ಆರಂಭವಾಗಲಿದೆ. ಜೂನ್ 15ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.

ಸ್ಪರ್ಧಿಸುವವರ ವಯಸ್ಸು 30 ವರ್ಷವಾಗಿರಬೇಕು. ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು. ನೈಋತ್ಯ ಪದವೀಧರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರು ಮಾತ್ರ ಸ್ಪರ್ಧಿಸಲು ಅರ್ಹ.

ADVERTISEMENT

ಚಾಮರಾಜನಗರ ಯಾವ ಕ್ಷೇತ್ರ?

ಚಾಮರಾಜನಗರ ಜಿಲ್ಲೆಯು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಳಪಡುತ್ತದೆ. ಇದರಲ್ಲಿ ಚಾಮರಾಜನಗರ ಮಾತ್ರವಲ್ಲ ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳೂ ಇವೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಇದರ ಚುನಾವಣಾಧಿಕಾರಿಯಾಗಿದ್ದಾರೆ.

ಆಯುಕ್ತರ ಕಚೇರಿಯಲ್ಲಿ ಮೇ 15ರಿಂದ 22ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಸಬಹುದು. ವಿವರಗಳಿಗೆ, ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಪಿ.ಹೇಮಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹ್ಯಾಟ್ರಿಕ್ ನಂತರ ಸ್ಪರ್ಧೆಗೆ ಸಜ್ಜು

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗಿರುವ ಜೆಡಿಎಸ್‌ನ ಮರಿತಿಬ್ಬೇಗೌಡ ನಾಲ್ಕನೇ ಬಾರಿ ಆಯ್ಕೆ ಬಯಸಿ ಸ್ಪರ್ಧೆಗೆ ಸಜ್ಜಾಗಿದ್ದಾರೆ. 2000ದಿಂದ ಇಲ್ಲಿಯವರೆಗೆ ಇವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇದಕ್ಕೂ ಪೂರ್ವದಲ್ಲಿ ನಿತ್ಯ ಸಚಿವ ಎಂದೇ ಹೆಸರಾಗಿದ್ದ ಕೆ.ವಿ.ಶಂಕರಗೌಡ ಅವರ ಪುತ್ರ ಸಚ್ಚಿದಾನಂದ ಅವರು ಆಯ್ಕೆಯಾಗಿದ್ದರು. ಸದ್ಯ, ಕಾಂಗ್ರೆಸ್‌ನಲ್ಲಿ ಎಂ.ಲಕ್ಷ್ಮಣ್ ಹಾಗೂ ಬಿಜೆಪಿಯಿಂದ ನಿರಂಜನಮೂರ್ತಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.