ADVERTISEMENT

ಪ್ರಯೋಗಶಾಲೆ ನಿರ್ಮಾಣಕ್ಕೆ ರೂ.1.5 ಕೋಟಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2012, 7:40 IST
Last Updated 15 ಅಕ್ಟೋಬರ್ 2012, 7:40 IST

ಗುಂಡ್ಲುಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹೆಚ್ಚುವರಿ ಕೊಠಡಿ ಹಾಗೂ ಪ್ರಯೋಗಶಾಲೆಗಳ ನಿರ್ಮಾಣಕ್ಕೆ ರೂ.1.5 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಶಾಸಕ ಎಚ್.ಎಸ್. ಮಹದೇವಪ್ರಸಾದ್ ಶನಿವಾರ ಭರವಸೆ ನೀಡಿದರು.

ಪಟ್ಟಣದ ಗುರುಭವನದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

 ಈ ಕಾಲೇಜು ಶೈಕ್ಷಣಿಕವಾಗಿ ಪ್ರಗತಿ ಸಾಧಿಸುತ್ತಿರುವುದು ಸಂತಸ ತಂದಿದೆ. ಕೇವಲ 350 ವಿದ್ಯಾರ್ಥಿಗಳಿಂದ ಪ್ರಾರಂಭವಾಗಿ ಈಗ 1,500 ವಿದ್ಯಾರ್ಥಿಗಳನ್ನು ಹೊಂದಿದ್ದು, ಕಳೆದ ಸಾಲಿನಲ್ಲಿ ಉತ್ತಮ ಫಲಿತಾಂಶ ಪಡೆದಿದೆ ಎಂದರು. ಈ ಕಾಲೇಜಿಗೆ ಅಗತ್ಯವಾದ ಮೂಲ ಸೌಕರ್ಯವನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಚಲನಚಿತ್ರ ನಟ ಸರ್ದಾರ್ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು. ಯಶಸ್ಸಿಗೆ ಕಠಿಣ ಪರಿಶ್ರಮ ಅಗತ್ಯ ಎಂದರು.

ಕಾಲೇಜಿನ ಪ್ರಾಚಾರ್ಯ ಪ್ರೊ .ಬಿ.ಎಂ. ರಾಮದಾಸ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ. ಮುನಿರಾಜು, ಚುಟುಕು ಸಾಹಿತ್ಯ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಎಚ್.ಎನ್. ಅತಾವುಲ್ಲಾ ಖಾನ್, ಪುರಸಭಾ ಮಾಜಿ ಸದಸ್ಯ ಅಣ್ಣಯ್ಯಸ್ವಾಮಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಸದಸ್ಯ ಪುಟ್ಟಸ್ವಾಮಾಚಾರ್ ಇತರರು ಹಾಜರಿದ್ದರು.

`ಶೌಚಾಲಯ ಅಗತ್ಯ~
ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಲು ಪ್ರತಿಯೊಂದು ಕುಟುಂಬವು ಶೌಚಾಲಯ ಹೊಂದ ಬೇಕು ಎಂದು ಶಾಸಕ ಎಚ್.ಎಸ್.ಮಹದೇವಪ್ರಸಾದ್ ಸಲಹೆ ನೀಡಿದರು.

ತಾಲ್ಲೂಕಿನ ಕಮರಹಳ್ಳಿಯಲ್ಲಿ ಬೇಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಈಚೆಗೆ ನಡೆದ ರಾಷ್ಟ್ರೀಯ ಸೇವಾ ಶಿಬಿರದಲ್ಲಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಶ್ರಮಿಸಬೇಕು. ಯಾವುದೇ ಪ್ರತಿಫಲಾಪೇಕ್ಷೆಇಲ್ಲದೆ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಸ್ವಚ್ಛತೆಯ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದರು.

ಬೇಗೂರು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಡಿ.ಸಿ. ನಾಗೇಂದ್ರ, ಮಾಜಿ ಅಧ್ಯಕ್ಷ ಬಿ.ಎಂ. ಮುನಿರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್. ಬಸವರಾಜು, ಪ್ರಾಚಾರ್ಯ ಬಸನಗೌಡ ಜಿ. ಬೆಳಕೆರಿ, ಉಪನ್ಯಾಸಕರಾದ ಭಾಸ್ಕರ್, ಷಡಕ್ಷರಸ್ವಾಮಿ ಇತರರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.