ADVERTISEMENT

ಬಿಜೆಪಿ ಸಂಘಟನೆಗೆ ಒತ್ತು ನೀಡಿ: ಸಿದ್ದರಾಜು

​ಪ್ರಜಾವಾಣಿ ವಾರ್ತೆ
Published 18 ಜುಲೈ 2013, 9:27 IST
Last Updated 18 ಜುಲೈ 2013, 9:27 IST

ಚಾಮರಾಜನಗರ: `ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದಲ್ಲಿ ಬಿಜೆಪಿ ಸದೃಢ ಗೊಳಿಸಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು' ಎಂದು ವಿಧಾನ ಪರಿಷತ್ ಸದಸ್ಯ ಸಿದ್ದರಾಜು ಸಲಹೆ ನೀಡಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಈಚೆಗೆ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ತಾಲ್ಲೂಕು ಪಂಚಾಯಿತಿ ಸದಸ್ಯ ಆರ್. ಮಹದೇವ್ ಹಾಗೂ ನಗರ ಘಟಕದ ಅಧ್ಯಕ್ಷ ಶಿವಣ್ಣಗೆ ಪಕ್ಷದ ಧ್ವಜ ನೀಡಿ ಅವರು ಮಾತನಾಡಿದರು.

ನೂತನ ಅಧ್ಯಕ್ಷರು ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸಬೇಕು. 150 ದಿನಗಳಲ್ಲಿ 36 ಕಾರ್ಯಕ್ರಮ ಸಂಘಟಿಸುವ ಮೂಲಕ ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಜನಜಾಗೃತಿ ಮೂಡಿಸಬೇಕು ಎಂದರು.

ಮುಂಬರುವ ಲೋಕಸಭಾ ಚುನಾವಣೆ ವೇಳೆಗೆ ಬೂತ್‌ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸಬೇಕು. 15 ಮಂದಿ ಒಳಗೊಂಡ ತಂಡ ರಚಿಸಬೇಕು ಎಂದು ಹೇಳಿದರು.

ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಬಿಜೆಪಿ ಶಿಸ್ತಿನ ಪಕ್ಷ. ಪಕ್ಷಕ್ಕೆ ಕಳೆದ ಚುನಾವಣೆಯಲ್ಲಿ ಕಡಿಮೆ ಮತ ಬಂದಿರ ಬಹುದು. ಆದರೆ, ಕಾರ್ಯಕರ್ತರ ದೊಡ್ಡ ಪಡೆ ಹೊಂದಿದೆ. ಅವರನ್ನು ಸಂಘಟಿಸಿ ಪಕ್ಷದ ಬಲವರ್ಧನೆ ಮಾಡಬೇಕಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್,  ಪಕ್ಷದ ಚುನಾವಣಾಧಿಕಾರಿಗಳಾದ ಕೆ.ಎಸ್. ನಾಗರಾಜಪ್ಪ, ಮಲ್ಲೆೀಶ್, ಚೂಡಾ ಮಾಜಿ ಅಧ್ಯಕ್ಷ  ಬಾಲಸುಬ್ರಮಣ್ಯ, ಆರ್. ಸುಂದರ್, ಮುಖಂಡರಾದ  ನಿಜಗುಣರಾಜು, ನಾಗರಾಜು, ಕುದೇರು ಮಹದೇವಯ್ಯ, ರ. ನಾರಾಯಣಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.