ADVERTISEMENT

ಬೆಳೆ ಕಟಾವು ಪ್ರಯೋಗಕ್ಕೆ ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2011, 9:15 IST
Last Updated 8 ಜೂನ್ 2011, 9:15 IST

ಚಾಮರಾಜನಗರ: ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗಗಳಿಗೆ ಒತ್ತು ನೀಡಬೇಕಾದ ಅವಶ್ಯಕತೆ ಇದ್ದು, ಹೋಬಳಿ ಮಟ್ಟದ ನೋಡೆಲ್ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಅಮರನಾರಾಯಣ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಮುಂಗಾರು ಹಂಗಾಮು ಬೆಳೆ ವಿಮೆ ಅನುಷ್ಠಾನ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳೆ ಕಟಾವು ಪ್ರಯೋಗಗಳ ವರದಿ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಆಗಬೇಕಿದೆ. ಹೋಬಳಿಗಳಲ್ಲಿ ನಡೆಯುವ ಬೆಳೆ ಕಟಾವು ಪ್ರಯೋಗಗಳ ದಿನಾಂಕ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಹಾಗೂ ನೋಡೆಲ್ ಅಧಿಕಾರಿಗಳ ಗಮನಕ್ಕೆ ತರಬೇಕು. ಪ್ರಸ್ತಕ ಸಾಲಿನಲ್ಲಿ ಹೋಬಳಿ ಮಟ್ಟದ 18 ನೋಡೆಲ್ ಅಧಿಕಾರಿಗಳು ಬೆಳೆ ಕಟಾವು ಪ್ರಯೋಗ ಕಾರ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಅಮರನಾರಾಯಣ ತಿಳಿಸಿದರು.

ಬೆಳೆ ವಿಮಾ ಪರಿಹಾರ ಸಕಾಲದಲ್ಲಿ ರೈತರಿಗೆ ತಲುಪುವಂತಾಗಬೇಕು. ಇದರಿಂದ ಕೃಷಿ ಪರಿಕರ, ರಸ ಗೊಬ್ಬರ  ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಪೂರಕವಾದ ಸಾಮಗ್ರಿಗಳನ್ನು ಕೊಳ್ಳಲು ರೈತರಿಗೆ ಅನೂಕೂಲವಾಗಲಿದೆ. ಹಿಂದಿನ ಸಾಲಿನ ಬೆಳೆ ವಿಮಾ ಪರಿಹಾರ ರೈತರಿಗೆ ತ್ವರಿತವಾಗಿ ಪಡೆಯಲು ಅನುಕೂಲವಾಗುವಂತೆ ಸಂಬಂಧ  ಪಟ್ಟವರಿಗೆ ಪತ್ರ ಬರೆಯಲು ಜಿಲ್ಲಾಧಿಕಾರಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜಾರಿಯಿಂದ ಜಿಲ್ಲೆಯ ರೈತರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಜಿಲ್ಲೆಗೆ ಸೇರ್ಪಡೆ ಮಾಡಲು ಕೋರಿ ಪ್ರಸ್ತಾವ ಸಲ್ಲಿಸಲು ಅಮರನಾರಾಯಣ ತಿಳಿಸಿದರು.

ಪ್ರಕೃತಿ ವಿಕೋಪದಿಂದ ನಷ್ಟ ಉಂಟಾದ ಸಂದರ್ಭದಲ್ಲಿ ವಿಮೆಗೆ ಒಳಪಟ್ಟ ರೈತರು ಅನುಸರಿಸಬೇಕಿರುವ ಕ್ರಮಗಳ ಕುರಿತು ಕೃಷಿಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ಜಂಟಿ ಕೃಷಿ ನಿರ್ದೇಶಕ ಬಿ.ಎಂ. ಶಿವಮಲ್ಲು ಮಾತನಾಡಿದರ. ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ.ಆರ್. ಗಿರೀಶ್, ತಹಶೀಲ್ದಾರ್ ಮಂಜುನಾಥ್, ಕೆ.ಎಂ.ಸುರೇಶ್, ಜಿ. ಹನುಮಂತರಾಯಪ್ಪ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಸ್.ಎನ್.ಮಠ, ಲೀಡ್ ಬ್ಯಾಂಕ್ ಮ್ಯಾನೇಜರ್ ಲಕ್ಷುಕುಮಾರ್, ಸಹಕಾರ ಸಂಘಗಳ ಉಪನಿಬಂಧಕರಾದ ಕೆ.ಎಂ. ಶಿವಕುಮಾರಸ್ವಾಮಿ, ನಬಾರ್ಡ್ ಬ್ಯಾಂಕ್ ವ್ಯವಸ್ಥಾಪಕ ಮುರಳಿ, ಸಹಾಯಕ ಕೃಷಿ ನಿರ್ದೇಶಕರು, ಇತರೆ ಕೃಷಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.