ಹನೂರು: ಕಾವೇರಿ ಕಣಿವೆಯಲ್ಲಿ ಒಂದು ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತಕ್ಕೆ ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.
ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಈ ಜಲಧಾರೆಯ ವಿಹಂಗಮ ನೋಟವನ್ನು ಆಸ್ವಾದಿಸಲು ವಾರದಿಂದಲೂ ಪ್ರವಾಸಿಗರ ಇತ್ತ ಆಗಮಿಸುತ್ತಿದ್ದಾರೆ. ಶನಿವಾರ ಮತ್ತು ಭಾನುವಾರ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿತ್ತು.
ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಂದ ಪ್ರವಾಸಿಗರ ದಂಡೆ ಹರಿದು ಬಂದು ನಯನ ಮನೋಹರ ದೃಶ್ಯ ವೈಭವವನ್ನು ಕಣ್ತುಂಬಿಕೊಂಡರು. ವಾಹನಗಳ ದಟ್ಟಣೆಯು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂತು.
ದಸರಾ ರಜೆ ಇರುವ ಕಾರಣ ಭರಚುಕ್ಕಿ ಜಲಪಾತ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರಿಂದ ಜಲಪಾತದ ಆವರಣ ತುಂಬಿ ಹೋಗಿತ್ತು. ಭಾನುವಾರ ಕಾರು, ಬಸ್ ಸೇರಿದಂತೆ ಇತರೆ ವಾಹನಗಳಲಿ ಸಾವಿರಾರು ಸಂಖ್ಯೆಯಲ್ಲಿ ಜಲಪಾತ ವೀಕ್ಷಣೆಗೆ ಬಂದಿದ್ದರು. ಪ್ರವಾಸಿಗರ ಸಂಖ್ಯೆ ಅಧಿಕವಾದ ಕಾರಣ ಸತ್ತೇಗಾಲ ಬಳಿ ಸಂಚಾರ ದಟ್ಟಣೆಯುಂಟಾಗಿ ಬೆಂಗಳೂರಿಗೆ ತೆರಳುವ ವಾಹನಗಳು ಪರದಾಡುವಂತಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.