ADVERTISEMENT

`ಭ್ರಷ್ಟಾಚಾರ ತಡೆಯಲು ಅರ್ಹರಿಗೆ ಮತ ನೀಡಿ'

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2013, 7:02 IST
Last Updated 4 ಏಪ್ರಿಲ್ 2013, 7:02 IST

ಚಾಮರಾಜನಗರ: `ಪ್ರಸ್ತುತ ಜನತಂತ್ರ ವ್ಯವಸ್ಥೆಯಲ್ಲಿ ಮತದಾರ ಪ್ರಭುಗಳು ಸೇವಕರಂತೆ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ' ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ಸೋಮಶೇಖರಪ್ಪ ವಿಷಾದಿಸಿದರು.

ನಗರದ ಮನೋನಿಧಿ ನರ್ಸಿಂಗ್ ಕಾಲೇಜಿನಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಗೃಹರಕ್ಷಕದಳ, ಲಯನ್ಸ್ ಕ್ಲಬ್ ಆಫ್ ಗ್ರಾನೈಟ್ ಸಿಟಿ, ರೋಟರಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅದನ್ನು ಸರಿಪಡಿಸಲು ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕಿದೆ. ಅದಕ್ಕಾಗಿ ಯುವಜನರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

ಹಳ್ಳಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಆಗುತ್ತಿರುವ ಅನ್ಯಾಯ, ಜಾತಿ ಅಥವಾ ಆದಾಯ ಪ್ರಮಾಣ ಪತ್ರ ಪಡೆಯಲು ಎದುರಿಸಬೇಕಾದ ಸಮಸ್ಯೆಗಳು ಎಲ್ಲರಿಗೂ ಗೊತ್ತಿದೆ. ಹೀಗಾಗಿ, ದೇಶದ ವ್ಯವಸ್ಥೆ ಬದ ಲಾಯಿಸುವ ಶಕ್ತಿ ಯುವಪೀಳಿಗೆಗೆ ಇದೆ. ಸಮಸ್ಯೆ ಗಳನ್ನು ನಿವಾರಿಸುವ ಉದ್ದೇಶದಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ಲಯನ್ಸ್ ಸಂಸ್ಥೆ ಅಧ್ಯಕ್ಷ ಪ್ರಭುಸ್ವಾಮಿ ಮಾತನಾಡಿ, `18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾನ ಮಾಡಲು ಅರ್ಹರಾಗಿದ್ದಾರೆ. ಈ ತಿಂಗಳ 7ರೊಳಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಬೇಕು' ಎಂದು ಕೋರಿದರು.

ಲಯನ್ಸ್ ಕ್ಲಬ್ ಆಫ್ ಗ್ರಾನೈಟ್ ಸಿಟಿಯ ಕಾರ್ಯದರ್ಶಿ ಎಲ್. ಸುರೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಾಂಶುಪಾಲರಾದ ಸಿಬಿನ್ ಸಿ. ವರ್ಗೀಸ್ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್ ಬಿ.ಎಸ್. ಬಸವರಾಜು, ವಾರ್ತಾ ಧಿಕಾರಿ ಎನ್.ಎಸ್ ಮಹೇಶ್, ರೋಟರಿ ಸಂಸ್ಥೆ ಅಧ್ಯಕ್ಷ ಮಹೇಶ್, ಶಿವಪ್ರಸಾದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.