ಗುಂಡ್ಲುಪೇಟೆ: ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಬುಧವಾರ ಬಾಲ ಕಾರ್ಮಿಕ ವಿರೋಧಿ ದಿನ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಧೀಶ ಡಿ. ಕಮಲಾಕ್ಷ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಸಮಯದಲ್ಲಿ ಮಕ್ಕಳು ಸ್ಪ್ಯಾನರ್, ಸುತ್ತಿಗೆ ಹಿಡಿಯುತ್ತಿರುವುದು ದುರದೃಷ್ಟಕರ ಎಂದರು.
ಮಕ್ಕಳನ್ನು ಕೈಗಾರಿಕೆ, ಗಣಿಗಾರಿಕೆ, ಹೋಟೆಲ್ ಹಾಗೂ ಇತರೆ ಅಪಾಯಕಾರಿ ಕೆಲಸಗಳಿಗೆ ನಿಯೋಜನೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಅಪರಾಧ ಎಸಗಿದವರಿಗೆ ಕನಿಷ್ಠ 2 ವರ್ಷ ಜೈಲು ಅಥವಾ 25 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದರು.
ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಸ್. ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸರ್ಕಾರಿ ಅಭಿಯೋಜಕ ಬಿ.ಪಿ. ಮಂಜುನಾಥ್, ವಕೀಲರ ಸಂಘದ ಕಾರ್ಯದರ್ಶಿ ಎಚ್. ವಿ. ರವಿಕಾಂತ್, ಹಿರಿಯ ವಕೀಲರಾದ ಜಿ.ಬಿ. ನಂಜಪ್ಪ, ಪಾಪಣ್ಣ ಶೆಟ್ಟಿ, ಜಿ.ಪಿ. ಕೃಷ್ಣಮೂರ್ತಿ, ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.