ಕೊಳ್ಳೇಗಾಲ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ನೆರವೇರಿತು.
ತಮಿಳುನಾಡು ಕರ್ನಾಟಕದ ವಿವಿಧ ಜಿಲ್ಲೆಗಳಿಂದ 5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಮಹಾಲಯ ಅಮಾವಾಸ್ಯೆ ಅಂಗವಾಗಿ ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆಗಳು ಎಣ್ಣೇಮಜ್ಜನ ಸೇವೆ ನಡೆಸಲಾಯಿತು.
ಭಾನುವಾರದಂದು ಹುಲಿವಾಹನ ಬಸವ ವಾಹನ, ರುದ್ರಾಕ್ಷಿಮಂಟಪ ಸೇವೆಗಳ ಮೂಲಕ 10ಲಕ್ಷಕ್ಕೂ ಹೆಚ್ಚು ಹಣ ಸಂಗ್ರಹವಾಗಿದೆ. ಸೋಮ ವಾರ ಮಹಾಲಯ ಅಮಾವಾಸ್ಯೆ ಪ್ರಯುಕ್ತ 410 ಚಿನ್ನದ ತೇರು, ಉತ್ಸವ ನಡೆದು. ಹುಲಿವಾಹನ ಬಸವ ವಾಹನ ಮತ್ತು ರುದ್ರಾಕ್ಷಿ ಮಂಟಪ ಉತ್ಸವದಿಂದ 6,99,750ರೂ ಸಂಗ್ರಹವಾಗಿದೆ.
ಲಕ್ಷಾಂತರ ಜನರು ಆಗಮಿಸಿದ್ದ ಹಿನ್ನೆಲೆಯಲ್ಲಿ ದೇವಾಲಯದ ವಿಶೇಷ ಆಡಳಿತಾಧಿಕಾರಿ ಜಯವಿಭವಸ್ವಾಮಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಂ. ಶಿವಲಿಂಗೇ ಗೌಡರು ಮೇಲುಸ್ತುವಾರಿ ವಹಿಸಿ ಭಕ್ತ ರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿದ್ದರು.
24 ಗಂಟೆಗಳ ನಿರಂತರ ಪ್ರಸಾದ ವಿನಿಯೋಗ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು. ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮತ್ತು ಖಾಸ ಬಸ್ ಸಂಚಾರ ಏರ್ಪಡಿಸಲಾಗಿತ್ತು.
ದೇವಾಲಯವನ್ನು ಸಂಪೂರ್ಣ ವಾಗಿ ವರ್ಣಮಯ ಹೂಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಲಕ್ಷಾಂತರ ಭಕ್ತರು ದೇವಾಲಯದಲ್ಲಿ ಸಾಲುಗಟ್ಟಿ ನಿಂತು ವಿವಿಧ ಪೂಜೆಗಳಲ್ಲಿ ಪಾಲ್ಗೊಂಡರು. ಡಿ.ವೈ.ಎಸ್.ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.