ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಪ್ರಗತಿಯಲ್ಲಿರುವ ರಂಗ ಮಂದಿರ, ಡಾ.ಬಿ.ಆರ್. ಅಂಬೇಡ್ಕರ್ ಭವನ ಹಿಂಭಾಗದ ಊಟದ ಸಭಾಂಗಣ ಮತ್ತು ಅಡುಗೆ ಮನೆ ನಿರ್ಮಾಣ ಕಾಮಗಾರಿಯನ್ನು ಬುಧವಾರ ಸಂಸದ ಆರ್.ಧ್ರುವನಾರಾಯಣ ಮತ್ತು ವಿಧಾನ ಪರಿಷತ್ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಪರಿಶೀಲಿಸಿದರು.
ಸಂಸದ ಧ್ರುವನಾರಾಯಣ ಮಾತನಾಡಿ, ತ್ವರಿತವಾಗಿ ರಂಗ ಮಂದಿರದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಕಲಾವಿದರ ಅಭಿವೃದ್ಧಿಗೆ ಪೂರಕವಾದ ಭವನ ನಿರ್ಮಿಸಬೇಕು ಎಂದು ಸೂಚಿಸಿದರು.
ರಂಗ ಮಂದಿರದ ಮುಂಭಾಗ ಉದ್ಯಾನ ನಿರ್ಮಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ, ಶೇ. 60ರಷ್ಟು ಕಾಮಗಾರಿ ಮುಗಿದಿದೆ. ಉಳಿದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾಂಸ್ಕೃತಿಕ ಚಟುವಟಿಕೆ ಹಮ್ಮಿಕೊಳ್ಳಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.
ಮೂಲ ಸೌಲಭ್ಯ ಇಲ್ಲದೆ ಅಂಬೇಡ್ಕರ್ ಭವನ ಬಳಕೆಯಾಗುತ್ತಿಲ್ಲ. ಕೂಡಲೇ, ಅಡುಗೆ ಕೋಣೆ, ಊಟದ ಹಾಲ್ ಹಾಗೂ ಶೌಚಾಲಯ ನಿರ್ಮಾಣ ಮಾಡಬೇಕು. ಶುಭ ಸಮಾರಂಭ ಹಾಗೂ ಸಭೆಗಳಿಗೆ ಬಳಕೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ. ಪುಟ್ಟಬುದ್ಧಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.