ಚಾಮರಾಜನಗರ: ನಗರದ ಗಾಳಿಪುರ ಬಡಾವಣೆಯಲ್ಲಿ ಗುರುವಾರ ಶಾಸಕ ಸಿ. ಪುಟ್ಟರಂಗಶೆಟ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಹಾಗೂ ಹೈಮಾಸ್ಟ್ ಬೀದಿ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗಾಳಿಪುರ ಬಡಾವಣೆಯ 6ನೇ ವಾರ್ಡ್ನಲ್ಲಿ ₹ 1.5 ಕೋಟಿ ಹಾಗೂ 8ನೇ ವಾರ್ಡ್ನಲ್ಲಿ ₹ 8 ಲಕ್ಷ ವೆಚ್ಚದಡಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಕೇವಲ ಭೂಮಿಪೂಜೆ ಮಾಡುತ್ತಿದ್ದಾರೆ. ಇದು ರಾಜಕೀಯ ಗಿಮಿಕ್ ಎಂದು ಕೆಲವರು ಟೀಕಿಸುತ್ತಿದ್ದಾರೆ. ಇದು ಸರಿಯಲ್ಲ. ಜಿಲ್ಲಾ ಕೇಂದ್ರದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದೆ. ಈ ಅನುದಾನ ಬಳಕೆ ಮಾಡಿಕೊಂಡು ನಗರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಗುವುದು. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದರು.
ಎಸ್.ಎಫ್.ಸಿ ಅನುದಾನದಡಿ ಅತ್ಯಾಧುನಿಕವಾಗಿ ರಸ್ತೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ನಗರೋತ್ಥಾನ ಯೋಜನೆಯಡಿಯೂ ರಸ್ತೆ ಕಾಮಗಾರಿಗೆ ಹಣ ನಿಗದಿಯಾಗಿದೆ. ₹10.5 ಕೋಟಿ ವೆಚ್ಚದಲ್ಲಿ ರಾಮಸಮುದ್ರ, ಸಂಪಿಗೆ ರಸ್ತೆ, ಪಿಕಾರ್ಡೊ ಆಸ್ಪತ್ರೆ ರಸ್ತೆ ಮುಂತಾದೆಡೆ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಶೋಭಾ ಪುಟ್ಟಸ್ವಾಮಿ, ಉಪಾಧ್ಯಕ್ಷ ಆರ್.ಎಂ. ರಾಜಪ್ಪ, ಸದಸ್ಯರಾದ ನಂಜುಂಡಸ್ವಾಮಿ, ಸೈಯದ್ ಆರಿಫ್, ಮಹೇಶ್, ಪೌರಾಯುಕ್ತ ಎಂ. ರಾಜಣ್ಣ, ಚೂಡಾ ಅಧ್ಯಕ್ಷ ಸುಹೇಲ್ ಆಲಿಖಾನ್, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಉಮೇಶ್, ಎಪಿಎಂಸಿ ಅಧ್ಯಕ್ಷ ಬಿ.ಕೆ. ರವಿಕುಮಾರ್, ಮುಖಂಡರಾದ ಸುರೇಶ್ನಾಯಕ, ಮಹಮದ್ ಅಸ್ಗರ್ ಮುನ್ನ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.