ADVERTISEMENT

ರೈತರ ಅನಿರ್ದಿಷ್ಟಾವಧಿ ಧರಣಿ ಆರಂಭ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2011, 8:15 IST
Last Updated 22 ಫೆಬ್ರುವರಿ 2011, 8:15 IST

ಗುಂಡ್ಲುಪೇಟೆ : ರೈತರು ಬೆಳೆದ ಕಬ್ಬಿಗೆ ಸರಿಯಾದ ಬೆಲೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಚಾಮರಾಜನಗರ ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ಜಂಟಿಯಾಗಿ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿವೆ. ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ನಂತರ ತಾಲ್ಲೂಕು ಕಚೇರಿ ಮುಂಭಾಗ ಸಮಾವೇಶಗೊಂಡು ತಹಶೀಲ್ದಾರ್ ಜಿ.ಎನ್. ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು. 

ಚಾಮರಾಜನಗರ ಈ ಸಂದರ್ಭದಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಹೇಶ್‌ಪ್ರಭು ಮಾತನಾಡಿ, ರೈತರ ಪ್ರಮುಖ ಬೇಡಿಕೆಗಳು ಈಡೇರು ವವರೆಗೆ ಧರಣಿ ಮುಂದುವರಿ ಯಲಿದೆ. ರೈತರ ಸಮಸ್ಯೆ ಪರಿಹರಿಸಲು ಸರ್ಕಾರ ಗಮನಹರಿಸುತ್ತಿಲ್ಲ. ಕಾಡಂಚಿನ ಗ್ರಾಮಗಳ ರೈತರಿಗೆ ಕಾಡು ಮೃಗಗಳ ಉಪಟಳ, ರೈತರು ಬೆಳೆಯುವ ಬೆಳೆಗಳಿಗೆ ಸಮರ್ಪಕವಾದ ಬೆಲೆ ದೊರೆಯದೇ ಇರುವುದು, ಸಕ್ಕರೆ ಕಾರ್ಖಾನೆಗಳು ರೈತರು ಬೆಳೆದ ಕಬ್ಬಿಗೆ ಸರಿಯಾದ ಬೆಲೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ಕಬಿನಿ ನದಿಯಿಂದ ತಾಲ್ಲೂಕಿನಲ್ಲಿರುವ ವಿವಿಧ ಕೆರೆಗಳಿಗೆ ನೀರು ತುಂಬಿಸಬೇಕು. 20 ವರ್ಷ ಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು. ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿರುವ ಮೇಲುಕಾಮನಹಳ್ಳಿ ಗ್ರಾಮದ ಬಳಿ ತೆಗೆಯುತ್ತಿರುವ ಟ್ರಂಚ್ ಕೆಲಸವನ್ನು ಕೂಡಲೇ ನಿಲ್ಲಿಸಬೇಕು, ತಾಲ್ಲೂಕಿನ ವಿವಿಧ ಕಚೇರಿಗಳಲ್ಲಿ ರೈತರಿಗೆ ಸಂಬಂಧಿಸಿದ ಕಡತಗಳು ವಿಲೇವಾರಿಯಾಗ ಬೇಕು ಹಾಗೂ ಅರಣ್ಯ ಇಲಾಖೆ ವತಿಯಿಂದ ಕೂಡಲೇ ಶೀಘ್ರ ಪರಿಹಾರ ಕೊಡಿಸ ಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ಪ್ರಕಾಶ್, ಚಾಮರಾಜನಗರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು, ಮೈಸೂರು ಜಿಲ್ಲಾ ರೈತ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆಂಪಣ್ಣ, ಶಿವಪುರ ಮಹಾದೇವಪ್ಪ, ಪ್ರಧಾನ ಕಾರ್ಯದರ್ಶಿ ನಾಗೇಂದ್ರಪ್ರಸಾದ್, ಹಸಿರು ಸೇನಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.