ADVERTISEMENT

ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2011, 10:10 IST
Last Updated 14 ಸೆಪ್ಟೆಂಬರ್ 2011, 10:10 IST

ಚಾಮರಾಜನಗರ: `ಪ್ರಸ್ತುತ ದೇಶದ ರಾಜಕೀಯ ವ್ಯವಸ್ಥೆ ಹದಗೆಟ್ಟಿದ್ದು, ಇದನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕು~ ಎಂದು ಡಯಟ್‌ನ ನಿವೃತ್ತ ಪ್ರಾಂಶುಪಾಲ ಎಸ್.ಜೆ. ಸತ್ಯನಾರಾಯಣ ಸಲಹೆ ನೀಡಿದರು.

ನಗರದ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲ ಯದಲ್ಲಿ ಈಚೆಗೆ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿಗೆ ಯುವಜನರು ಮುಂದಾಗಬೇಕು. ಹೀಗಾಗಿ, ಉತ್ತಮ ಪ್ರಜೆಗಳನ್ನು ರೂಪಿಸುವುದು ಶಿಕ್ಷಕರ ಜವಾಬ್ದಾರಿ. ಅದೃಷ್ಟದ ಮೇಲೆ ನಂಬಿಕೆ ಇಟ್ಟುಕೊಳ್ಳಬಾರದು. ಸ್ವಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಶಿಕ್ಷಕರು ಬೋಧನೆ ಮಾಡಬೇಕಿದೆ ಎಂದರು.

ಡಾ.ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಅವರ ಆದರ್ಶಗಳ ಪಾಲನೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮುಂದಾಗಬೇಕು. ಯುವಜನರೇ ದೇಶದ ಸಂಪತ್ತು. ಹೀಗಾಗಿ, ವಿದ್ಯಾರ್ಥಿಗಳಿಗೆ ನೈತಿಕತೆಯ ಶಿಕ್ಷಣ ನೀಡುವುದು ಶಿಕ್ಷಕರ ಹೊಣೆ ಎಂದು ನುಡಿದರು.

ವಿದ್ಯಾರ್ಥಿಗಳ ಬದುಕಿಗೆ ಗುರುವೇ ದಾರಿದೀಪ. ಸಮಾಜದಲ್ಲಿ ಶಿಕ್ಷಕನಿಗೆ ದೇವರಿಗಿಂತಲೂ ಮೀಗಿಲಾದ ಸ್ಥಾನ ಸಿಕ್ಕಿದೆ. ಶಿಕ್ಷಕ ವೃತ್ತಿ ಶ್ರೇಷ್ಠವಾದುದು. ಇದನ್ನು ಅರಿತು ಮುನ್ನಡೆಯಬೇಕಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ದೇಶದಲ್ಲಿ ಭ್ರಷ್ಟಾಚಾರ ಬೇರುಬಿಟ್ಟಿದೆ. ಇದರ ನಿರ್ಮೂಲನೆಗೆ ಯುವಜನರು ಪಣ ತೊಡಬೇಕು. ವಿದ್ಯಾರ್ಥಿಗಳು ಪರಿವರ್ತನಾಶೀಲ ಗುಣ ಬೆಳೆಸಿಕೊಳ್ಳಬೇಕು. ಇದಕ್ಕೆ ಶಿಕ್ಷಕರು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎಸ್.ಜೆ. ಸತ್ಯನಾರಾಯಣ ಹಾಗೂ ನಿವೃತ್ತ ಶಿಕ್ಷಕ ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಪ್ರೊ.ಎಂ. ಬಸವರಾಜು ಅಧ್ಯಕ್ಷತೆವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.