ADVERTISEMENT

`ವ್ಯವಸ್ಥಿತ ಚುನಾವಣೆಗೆ ಕ್ರಮವಹಿಸಿ'

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2013, 5:51 IST
Last Updated 13 ಏಪ್ರಿಲ್ 2013, 5:51 IST

ಚಾಮರಾಜನಗರ: ಚುನಾವಣೆ ಆಯೋಗದ ನಿರ್ದೇಶನದಂತೆ ಜಿಲ್ಲಾಡಳಿತದಿಂದ ಈಗಾಗಲೇ, ನಿಯೋಜಿಸಲಾಗಿರುವ ವಿವಿಧ ತಂಡಗಳ ಚುನಾವಣಾ ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗದರ್ಶನದಂತೆ ವ್ಯವಸ್ಥಿತ ಚುನಾವಣೆ ನಡೆಸಲು ಕ್ರಮವಹಿಸಬೇಕು ಎಂದು ಜಿಲ್ಲೆಯ ಚಾಮರಾಜನಗರ ವಿಧಾನಸಭಾ ಕ್ಷೇತ್ರ ಹಾಗೂ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಚುನಾವಣಾ ಲೆಕ್ಕ ವೀಕ್ಷಕರಾಗಿ ನಿಯೋಜನೆಗೊಂಡಿರುವ ಧರ್ಮೇಂದ್ರ ಕುಮಾರ್ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಕೆ.ಡಿ.ಪಿ ಸಭಾಂಗಣದಲ್ಲಿ ಚುನಾವಣಾ ಅಧಿಕಾರಿಗಳಿಗೆ ಬುಧವಾರ ಏರ್ಪಡಿಸಿದ್ದ ತರಬೇತಿ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ವೆಚ್ಚ ಸಮೀಕ್ಷಣಾ ಕೇಂದ್ರ, ಸಹಾಯಕ ವೆಚ್ಚ ವೀಕ್ಷಣಾ ಕೇಂದ್ರಗಳ ಅಧಿಕಾರಿಗಳು, ವಿಡಿಯೋ ಸಮೀಕ್ಷಾ ತಂಡ, ವಿಡಿಯೋ ಅವಲೋಕನಾ ತಂಡ, ವೆಚ್ಚ ಪರಿಶೀಲನಾ ತಂಡ, ಮಾಧ್ಯಮ ದೃಢೀಕರಣ ಮತ್ತು ನಿರ್ವಹಣಾ ಸಮಿತಿ, ವಿಚಕ್ಷಣಾ ತಂಡ, ಅಂಕಿ-ಅಂಶ ಮತ್ತಿತರ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಧಿಕಾರಿಗಳು ಶಾಂತಿಯುತ ಚುನಾವಣೆಗೆ ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಮಾತನಾಡಿ, `ಚುನಾವಣೆಗೆ ನಿಯೋಜಿಸಿರುವ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡಬೇಕು. ತಮ್ಮ ವ್ಯಾಪ್ತಿಯಲ್ಲಿ ಸಭೆ ಸಮಾರಂಭ ಮತ್ತಿತರ ಕಾರ್ಯಕ್ರಮಗಳು ಆಗುವ ಸಂದರ್ಭದ ವೆಚ್ಚ, ವಾಹನಗಳ ಬಗ್ಗೆ ನಿಗಾ ಇಡುವ ಜೊತೆಗೆ ವಾಹನಗಳ ನಂಬರ್‌ಗಳ ವಿಡಿಯೋ ಮಾಡಿಕೊಳ್ಳಬೇಕು. ಖರ್ಚು ವೆಚ್ಚದ ಬಗ್ಗೆ ನಿಗಾವಹಿಸಿ ಮಾಹಿತಿ ನೀಡಬೇಕು' ಎಂದು ಹೇಳಿದರು.

ಸಭೆಯಲ್ಲಿ ಕೊಳ್ಳೇಗಾಲ ಮತ್ತು ಹನೂರು ವಿಧಾನ ಸಭಾ ಕ್ಷೇತ್ರಗಳಿಗೆ ಚುನಾವಣಾ ಲೆಕ್ಕ ವೀಕ್ಷಕರಾಗಿ ನಿಯೋಜನೆಗೊಂಡಿರುವ ಪಂಕಜ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಭಾರತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.