ಕೊಳ್ಳೇಗಾಲ: ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಡೆಂಗಿ ಹಾಗೂ ಚಿಕೂನ್ಗುನ್ಯ ರೋಗಗಳು ಹರಡದಂತೆ ತಡೆಗಟ್ಟಬೇಕು. ಇದಕ್ಕಾಗಿ ಸೊಳ್ಳೆಮುಕ್ತ ನಗರವನ್ನಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಫೌಜಿಯಾ ತರನ್ನುಮ್ ಸೂಚಿಸಿದರು.
ನಗರದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಡೆಂಗಿ ಹಾಗೂ ಚಿಕೂನ್ಗುನ್ಯ ತಡೆಗೆ ಅಗತ್ಯ ಕ್ರಮಕೈಗೊಳ್ಳಲು ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.
ಮುಂಗಾರು ಮಳೆ ಪ್ರಾರಂಭಗೊಂಡಿದ್ದು, ಉತ್ತಮ ಮಳೆ ಬೀಳುತ್ತಿದೆ. ಇದರಿಂದ ಚಿಕೂನ್ಗುನ್ಯ, ಡೆಂಗಿಯಂತಹ ರೋಗಗಳು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಇವು ಹರಡದಂತೆ ನಿಗಾವಹಿಸಬೇಕು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ನಗರ, ಗ್ರಾಮಾಂತರ ಪ್ರದೇಶಗಳಿಗೆ ಅಂಗನವಾಡಿ ಕಾರ್ಯಕರ್ತರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧಿಕಾರಿಗಳು ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಶಾಲಾ– ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಲಯಗಳಲ್ಲಿ ಸ್ವಚ್ಛತೆಗೆ ಒತ್ತು ನೀಡಬೇಕು. ರಸ್ತೆಬದಿ ವ್ಯಾಪಾರ ಮಾಡುವವರು ಕಸವನ್ನು ಎಲ್ಲೆಂದರಲ್ಲಿ ಹಾಕದಂತೆ ಕಟ್ಟುನಿಟ್ಟಿನ ಸೂಚನೆ ಕೊಡಬೇಕು. ಕೋಳಿ ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ತಹಶೀಲ್ದಾರ್ ಮೋಹನ್, ಬಿಇಒ ಶಿವಲಿಂಗಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್. ಉಮೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಗೋಪಾಲಯ್ಯ, ಸಂಯೋಜನಾಧಿಕಾರಿ ಶಿವರಾಮೇಗೌಡ, ಸಿಡಿಪಿಒ ನಾಗೇಶ್, ಸಮಾಜ ಕಲ್ಯಾಣಾಧಿಕಾರಿ ಮಂಜುಳಾ, ಪರಿಸರ ಅಧಿಕಾರಿ ಧನಂಜಯ್ಯ, ಆರೋಗ್ಯ ನಿರೀಕ್ಷಕಿ ಭೂಮಿಕಾ ಇತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.