ಕೊಳ್ಳೇಗಾಲ: ‘ಕೇಂದ್ರ ಮತ್ತು ರಾಜ್ಯ ಸರ್ಕಾರ ತಂದಿರುವ ದೂರಗಾಮಿ ಬದಲಾವಣೆಯ ಕುರಿತು ಜನತೆಗೆ ಮಾಹಿತಿ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು’ ಎಂದು ಶಾಸಕ ಎಸ್. ಜಯಣ್ಣ ತಿಳಿಸಿದರು.
ತಾಲ್ಲೂಕಿನ ಮಧುವನಹಳ್ಳಿಯಲ್ಲಿ ಗುರುವಾರ ಹನೂರು ಮತ್ತು ರಾಮಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಜಾಗೃತಿ ಕಾರ್ಯಕ್ರಮದಲ್ಲ ಮಾತನಾಡಿದರು.
ಶಾಸಕ ಪುಟ್ಟರಂಗ ಶೆಟ್ಟಿ ಮಾತನಾಡಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಸಮಾಜದಲ್ಲಿ ತೀರಾ ಹಿಂದುಳಿದಿರುವ ಉಪ್ಪಾರ ಜನಾಂಗದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ವಿಧಾನಪರಿಷತ್ ಮಾಜಿ ಸದಸ್ಯ ದಿ. ಎ. ಮಷಣಶೆಟ್ಟಿ, ಜವರಾಯಶೆಟ್ಟಿ ಮತ್ತು ಕಾಡಾ ಅಧ್ಯಕ್ಷರನ್ನಾಗಿ ಎ. ನಟರಾಜು ಅವರಿಗೆ ಕಾಂಗ್ರೆಸ್ ಅವಕಾಶ ನೀಡಿತ್ತು.
ಚಾಮರಾಜನಗರ ದಿಂದ ನನಗೆ 2 ಬಾರಿ ಟಿಕೇಟ್ ನೀಡಿ ಜನಾಂಗದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಕಲ್ಪಿಸಿದೆ. ಆರ್.ಧ್ರುವನಾರಾಯಣ ಅವರನ್ನು ಮತ್ತೊಮ್ಮೆ ಗೆಲ್ಲಿಸಲು ಉಪ್ಪಾರ ಸಮುದಾಯ ಶ್ರಮಿಸಬೇಕು ಎಂದು ತಿಳಿಸಿದರು.
ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ಪರಿಶಿಷ್ಟ ಜನಾಂಗಕ್ಕೆ ಈ ಬಾರಿಯ ಬಜೆಟ್ನಲ್ಲಿ 15ಸಾವಿರ ಕೋಟಿ ಮೀಸಲಿಡಲಾಗಿದೆ. ಉಪ್ಪಾರ ಜನಾಂಗವನ್ನು ಎಸ್.ಟಿ ಜನಾಂಗಕ್ಕೆ ಸೇರ್ಪಡೆ ಮಾಡುವ ಹಾಗೂ ಭಗೀರಥ ಜಯಂತಿಯನ್ನು ಸರ್ಕಾರದಿಂದಲೇ ಮಾಡುವ ಬಗ್ಗೆ ಚಿಂತಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪುಟ್ಟಬಸವಶೆಟ್ಟ, ನಂಜುಂಡಸ್ವಾಮಿ ಲಾರಿ ಮಹಾದೇವ, ಕ್ರೈಸ್ತ ಒಕ್ಕೂಟದ ಅಧ್ಯಕ್ಷ ಜಿ. ಸೆಲ್ವರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.