ಚಾಮರಾಜನಗರ: ಜಿಲ್ಲೆಯಲ್ಲಿ ಕಠಿಣ ಲಾಕ್ಡೌನ್ ಇಂದಿನಿಂದ ಜಾರಿಯಾಗಿದ್ದು, ಪೊಲೀಸರು 31 ಚೆಕ್ಪೋಸ್ಟ್ಗಳನ್ನು ರಚಿಸಿದ್ದಾರೆ. ಅನಗತ್ಯವಾಗಿ ವಾಹನದಲ್ಲಿ ಓಡಾಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.
ಅಂತರಾಜ್ಯದಲ್ಲಿ ಈಗಾಗಲೇ ಇರುವ 6 ಚೆಕ್ಪೋಸ್ಟ್ ಜತೆಗೆ ತಾಳವಾಡಿ ಸಮೀಪ ಮತ್ತೊಂದು ಚೆಕ್ಪೋಸ್ಟ್ ಹಾಕಲಾಗಿದೆ. ಅಂತರಜಿಲ್ಲಾ ವಿಭಾಗದಲ್ಲಿ 7 ಚೆಕ್ಪೋಸ್ಟ್ಗಳು ಹಾಗೂ ಚಾಮರಾಜನಗರ ಸೇರಿದಂತೆ ವಿವಿಧ ತಾಲ್ಲೂಕುಗಳ ಪಟ್ಟಣ ಪ್ರದೇಶಗಳಲ್ಲಿ ಒಟ್ಟು 17 ಚೆಕ್ಪೋಸ್ಟ್ಗಳನ್ನು ರಚಿಸಲಾಗಿದೆ.
ಅನಗತ್ಯವಾಗಿ ವಾಹನದಲ್ಲಿ ಓಡಾಡುವವರ ವಾಹನಗಳನ್ನು ವಶಪಡಿಸಿಕೊಳ್ಳಲಾಗುವುದು. ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಬ್ಯಾಂಕ್, ಔಷಧ ಅಂಗಡಿ ಹಾಗೂ ಆಸ್ಪತ್ರೆಗಳಿಗೆ ಹೋಗುವವರು ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್ ಅವರನ್ನು ಸಂಪರ್ಕಿಸಿದಾಗ, ಅವರು ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಅನಗತ್ಯವಾಗಿ ಯಾರೂ ರಸ್ತೆಗಿಳಿಯಬಾರದು’ ಎಂದು ಹೇಳಿದರು.
ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಆದೇಶ
ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಕೋರೊನಾ ವೈರಸ್ ಎರಡನೇ ಅಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಸಿ.ಆರ್.ಪಿ.ಸಿ 1973 ಕಲಂ 144(1) ರಡಿ ಮೇ 10ರ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೇಳಿಗ್ಗೆ 6 ಗಂಟೆಯವರೆಗೆ ಜಿಲ್ಲಾದ್ಯಂತ ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸಲಾಗಿದ್ದು, ಜನರು ಇದನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ.
ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.