ADVERTISEMENT

5ನೇ ದಿನಕ್ಕೆ ಕಾಲಿಟ್ಟ ಗ್ರಾಮಸ್ಥರ ಧರಣಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2012, 9:25 IST
Last Updated 30 ಜೂನ್ 2012, 9:25 IST
5ನೇ ದಿನಕ್ಕೆ ಕಾಲಿಟ್ಟ ಗ್ರಾಮಸ್ಥರ ಧರಣಿ
5ನೇ ದಿನಕ್ಕೆ ಕಾಲಿಟ್ಟ ಗ್ರಾಮಸ್ಥರ ಧರಣಿ   

ಯಳಂದೂರು: ತಾಲ್ಲೂಕಿನ ವಡಗೆರೆ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಸ್ಥಾಪಿಸದಿರುವಂತೆ ಗ್ರಾಮಸ್ಥರು ಹಾಗೂ ಪ್ರಗತಿಪರ ಸಂಘಟನೆಗಳು ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 5ನೇ ದಿನವಾದ ಶುಕ್ರವಾರವೂ ಮುಂದುವರಿಯಿತು.

ದಿಗ್ಬಂಧನ: ಜಿಲ್ಲಾಧಿಕಾರಿ ಅವರನ್ನು ಧರಣಿ ಸ್ಥಳಕ್ಕೆ ಕರೆಸಬೇಕು ಎಂದು ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿಭಟನಾಕಾರರು ತಹಶೀಲ್ದಾರ್ ಶಿವನಾಗಯ್ಯ ಅವರಿಗೆ ದಿಗ್ಬಂಧನ ಹಾಕಿದ ಘಟನೆಯೂ ಜರುಗಿತು. ನಂತರ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಧರಣಿ ನಿರತರ ಜತೆ ಮಾತುಕತೆ ನಡೆಸಿದರು.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡಲು ಅಧಿಕಾರಿಗಳು ಗುರುವಾರ ಕಾಮಗಾರಿಯನ್ನು ಆರಂಭಿಸಿದ್ದಾರೆ. ಆದರೆ ಇಲ್ಲಿ ಅರಣ್ಯ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಕಾಮಗಾರಿ ನಡೆಯುತ್ತಿದೆ. ತಕ್ಷಣವೇ ಕಾಮಗಾರಿಯನ್ನು ಸ್ಥಗಿತಗೊಳಿಸಿ ಗ್ರಾಮಸ್ಥರ ಜತೆ ಮಾತುಕತೆ ನಡೆಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮದಲ್ಲೂ ತ್ಯಾಜ್ಯ ವಿಲೇವಾರಿ ಮಾಡಲು ಘಟಕಗಳನ್ನು ಸ್ಥಾಪಿಸುವ ಯೋಜನೆ ಇದೆ. ಇಲ್ಲಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸುವುದರಿಂದ ಯಾವುದೇ ತೊಂದರೆ ಇಲ್ಲ. ಗ್ರಾಮದ ಅಭಿವೃದ್ಧಿಗೆ ಪೂರಕವಾಗುವ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಶನಿವಾರ 11 ಗಂಟೆಗೆ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸುವುದಾಗಿ ಅವರು ತಿಳಿಸಿದರು.

ತಹಶೀಲ್ದಾರ್ ಶಿವನಾಗಯ್ಯ, ಡಿವೈಎಸ್‌ಪಿ ಮಹಾದೇವಯ್ಯ, ಸರ್ಕಲ್ ಇನ್ಸ್‌ಪೆಕ್ಟರ್ ಕೀರ್ತಿಕುಮಾರ್, ಸಬ್‌ಇನ್ಸ್‌ಪೆಕ್ಟರ್ ಮಹಾದೇವನಾಯಕ, ಮುಖ್ಯಾಧಿಕಾರಿ ವಿಜಯ ಡಿಎಸ್‌ಎಸ್‌ನ ರಾಜಣ್ಣ, ಒಡನಾಡಿ ಡಾ. ಮಹಾದೇವ್, ಪ್ರಜಾ ವಿಮೋಚನಾ ಚಳವಳಿಯ ದುಗ್ಗಹಟ್ಟಿ ಮಾದೇಶ್, ಚಕ್ರವರ್ತಿ, ಗಂಗವಾಡಿ ಸೋಮಣ್ಣ, ಕಂದಹಳ್ಳಿ ನಾರಾಯಣ, ಸೋಮ, ಕೃಷ್ಣಪ್ಪ, ಯರಗಂಬಳ್ಳಿ ರಾಜಣ್ಣ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.