ಸಂತೇಮರಹಳ್ಳಿ: ಸಮೀಪದ ಮಂಗಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಬಸವ ವಸತಿ ಯೋಜನೆ ಆಶ್ರಯ ಫಲಾನುಭವಿಗಳ ಆಯ್ಕೆ ಸಂಬಂಧ ಈಚೆಗೆ ಗ್ರಾಮಸಭೆ ನಡೆಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಗದೀಶ್ ಮಾತನಾಡಿ, 2017–18ನೇ ಸಾಲಿನಲ್ಲಿ ಬಸವ ವಸತಿ ಯೋಜನೆಯಡಿಯಲ್ಲಿ 54 ಮನೆಗಳು ಮಂಜೂರಾಗಿದ್ದು, ಫಲಾನುಭವಿಗಳ ಆಯ್ಕೆ ಸಂಬಂಧ ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹೊಸೂರು, ಹುಲ್ಲೇಪುರ, ಮಹಾಂತಳಪುರ, ಕರಡಿಮೋಳೆ, ಯಡಿಯೂರು ಹಾಗೂ ಮಂಗಲ ಸೇರಿದಂತೆ 6 ಗ್ರಾಮಗಳ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲಾಗಿದೆ ಎಂದರು.
ಸೌಲಭ್ಯದಿಂದ ವಂಚಿತವಾಗಿರುವ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಫಲಾನುಭವಿಗಳು ನಿವೇಶನ ದಾಖಲಾತಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರವನ್ನು ಕಚೇರಿಗೆ ನೀಡಬೇಕು ಎಂದು ಮಾಹಿತಿ ನೀಡಿದರು.
ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮಸ್ಥರು ಸರ್ಕಾರದಿಂದ ದೊರಕುವ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕು. ಆಯ್ಕೆಯಾಗುವ ಫಲಾನುಭವಿಗಳು 3 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು. 4 ಹಂತದಲ್ಲಿ ಹಣ ಪಾವತಿಸಲಾಗುತ್ತದೆ. ಫಲಾನುಭವಿಗಳು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿ ಕೊಳ್ಳಬೇಕು ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯೆ ಪುಷ್ಬಲತಾ, ಗ್ರಾಮಪಂಚಾಯಿತಿ ಅಧ್ಯಕ್ಷೆ ಸಾಕಮ್ಮ, ಉಪಾಧ್ಯಕ್ಷೆ ಸುಮಾ, ಸದಸ್ಯರಾದ ಶಿವಣ್ಣ, ಅನ್ನಪ್ಪಸ್ವಾಮಿ, ನಾಗಲಕ್ಷ್ಮೀ, ಕಮಲಮ್ಮ, ದೊರೆಸ್ವಾಮಿ, ಮಹೇಶ್, ಆನಂದಮೂರ್ತಿ, ಶಂಕರ್, ನಾಗರಾಜು, ಸುಂದರ್, ನಾರಾಯಣ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.